ರಾಯಪುರ್: ಛತ್ತೀಸ್ ಢದ ನಾರಾಯಣಪುರ ಜಿಲ್ಲೆಯಲ್ಲಿ ಬುಧವಾರ ಪೊಲೀಸರು ಮತ್ತು ನಕ್ಸಲರ ನಡುವೆ ಸುಮಾರು ಒಂದು ಗಂಟೆಗಳ ಕಾಲ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ಪೊಲೀಸರು ಹುತಾತ್ಮರಾಗಿದ್ದಾರೆ ಮತ್ತು ಒಂಬತ್ತು ಪೊಲೀಸರು ಗಾಯಗೊಂಡಿದ್ದಾರೆ.
ಇಂದು ನಡೆದ ನಕ್ಸಲ್ ದಾಳಿಯಲ್ಲಿ ಇಬ್ಬರು ಸಬ್ ಇನ್ಸ್ ಪೆಕ್ಟರ್ ಮತ್ತು ಇಬ್ಬರು ಪೊಲೀಸ್ ಪೇದೆ ಹುತಾತ್ಮರಾಗಿದ್ದು, ಮೃತದೇಹಗಳನ್ನು ಎನ್ ಕೌಂಟರ್ ಸ್ಥಳದಿಂದ ಹೆಲಿಕಾಪ್ಟರ್ ಮೂಲಕ ರಾಯಪುರ್ ಗೆ ಸ್ಥಳಾಂತರಿಸಲಾಗಿದೆ.
ಪೊಲೀಸರ ಪ್ರಕಾರ, ನಕ್ಸಲರು ಮೊದಲು ಪ್ರಬಲವಾದ ಬಾಂಬ್ ಸ್ಫೋಟಿಸಿ ಬಳಿಕ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ಸಹ ಪ್ರತಿದಾಳಿ ನಡೆಸಿದ್ದು, ಸುಮಾರು 1 ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದೆ.
ಜಂಟಿ ವಿಶೇಷ ಕಾರ್ಯಪಡೆ ನೀಡಿದ ಖಚಿತ ಮಾಹಿತಿ ಆಧರಿಸಿ ಜಿಲ್ಲಾ ಮೀಸಲು ಪೊಲೀಸರು(ಡಿಆರ್ ಜಿ) ನಕ್ಸಲರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದರು.