ಸಂಗ್ರಹ ಚಿತ್ರ
ದೇಶ
69ನೇ ಗಣರಾಜ್ಯೋತ್ಸವ: ರಾಹುಲ್ ಗಾಂಧಿಗೆ 4ನೇ ಸಾಲಿನಲ್ಲಿ ಸ್ಥಾನ, ಕಾಂಗ್ರೆಸ್ ನಾಯಕರ ಕಿಡಿ
69ನೇ ಗಣರಾಜ್ಯೋತ್ಸವ ನಿಮಿತ್ತ ದೆಹಲಿಯಲ್ಲಿ ಆಯೋಜನೆಯಾಗಿರುವ ಪಥಸಂಚಲನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನಾಲ್ಕನೇ ಸಾಲಿನಲ್ಲಿ ಆಸನ ನೀಡಿರುವುದಕ್ಕೆ ಕಾಂಗ್ರೆಸ್ ಪಕ್ಷ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನವದೆಹಲಿ: 69ನೇ ಗಣರಾಜ್ಯೋತ್ಸವ ನಿಮಿತ್ತ ದೆಹಲಿಯಲ್ಲಿ ಆಯೋಜನೆಯಾಗಿರುವ ಪಥಸಂಚಲನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನಾಲ್ಕನೇ ಸಾಲಿನಲ್ಲಿ ಆಸನ ನೀಡಿರುವುದಕ್ಕೆ ಕಾಂಗ್ರೆಸ್ ಪಕ್ಷ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಹಿಂದಿನ ಗಣರಾಜ್ಯೋತ್ಸವಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರಿಗೆ ಮೊದಲ ಸಾಲಿನಲ್ಲಿ ಸ್ಥಳ ನಿಗದಿ ಮಾಡಲಾಗುತ್ತಿತ್ತು. ಆದರೆ ಪ್ರಧಾನಿ ಮೋದಿ ಸರ್ಕಾರ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದು, ಇದೇ ಕಾರಣಕ್ಕೆ ರಾಹುಲ್ ಅವರಿಗೆ ಅಗೌರವ ತೋರವು ಉದ್ದೇಶದಿಂದ ಅವರಿಗೆ ನಾಲ್ಕನೇ ಸಾಲಿನಲ್ಲಿ ಸ್ಥಾನ ನಿಗದಿ ಮಾಡಿದ್ದಾರೆ. ಆದರೂ ಕೂಡ ರಾಹುಲ್ ಗಾಂಧಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಮೂಲಗಳು ತಿಳಿಸಿವೆ.
ಇನ್ನು ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರದಿಂದಲೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಗೆ ಮೊದಲ ಸಾಲಿನಲ್ಲಿ ಆಸನವನ್ನು ಕಾಯ್ದಿರಿಸಲಾಗುತ್ತಿತ್ತು. ಈ ಹಿಂದೆ ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷೆಯಾಗಿದ್ದಾಗಲೂ ಅವರಿಗೆ ಮೊದಲ ಸಾಲಿನಲ್ಲಿ ಸ್ಥಾನ ಕಲ್ಪಿಸಲಾಗುತ್ತಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೂ ಕೂಡ ಬಿಜೆಪಿ ಅಧಿಕಾರಕ್ಕೆ ಬಂದ 2014ರಿಂದಲೂ ಮೊದಲ ಸಾಲಿನಲ್ಲಿ ಆಸನವನ್ನು ಕಾಯ್ದಿರಿಸಲಾಗುತ್ತಿದೆ. ರಾಜಕೀಯ ನಾಯಕರಿಗೆ ಮತ್ತು ಕೇಂದ್ರ ಸಚಿವರಿಗೆ ಯಾವ ಸಾಲಿನಲ್ಲಿ ಸ್ಥಾನ ಕಲ್ಪಿಸಲಾಗಿದೆ ಎಂಬುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ