ಜೈಪುರ: ರಾಜಸ್ಥಾನದ ಒಂದು ವಿಧಾನಸಭಾ ಮತ್ತು ಎರಡು ಲೋಕಸಭಾ ಕ್ಷೇತ್ರಗಳಿಗೆ ಕಳೆದ ಸೋಮವಾರ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಆಡಳಿತರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.
ಮಂಡಲಗಢ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ವಿವೇಕ್ ಧಾಕಡ್ ಅವರು 12976 ಮಂತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಆಡಳಿತರೂಢ ಬಿಜೆಪಿ ಕೈಯಲ್ಲಿದ್ದ ಆಲ್ವಾರ್ ಹಾಗು ಅಜ್ಮೀರ್ ಈಗ ಕಾಂಗ್ರೆಸ್ ವಶವಾಗಿದ್ದು, ಅಲ್ವಾರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕರಣ್ ಸಿಂಗ್ ಯಾದವ್ ಅವರು ಬಿಜೆಪಿಯ ಜಸ್ವಂತ್ ಸಿಂಗ್ ಯಾದವ್ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಇನ್ನು ಅಜ್ಮೀರ್ ನಲ್ಲಿ ಕಾಂಗ್ರೆಸ್ ನ ರಘು ಶರ್ಮಾ ಅವರು ಬಿಜೆಪಿಯ ರಾಮ್ ಸ್ವರೂಪ್ ಲಾಂಬಾ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ.
ರಾಜಸ್ಥಾನ ಕಾಂಗ್ರೆಸ್ ಸಾಧನೆ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಉತ್ತಮ ಕೆಲಸ ಮಾಡಿದ್ದೀರಿ, ನಿಮ್ಮ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದ್ದಾರೆ.
ಜನವರಿ 29ರಂದು ರಾಜಸ್ಥಾನದ ಎರಡು ಲೋಕಸಭಾ ಹಾಗು ಒಂದು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಈ ಚುನಾವಣೆಯು ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಅತ್ಯಂತ ಮಹತ್ವದ್ದಾಗಿತ್ತು. ಪದ್ಮಾವತ್ ಚಿತ್ರದ ವಿವಾದದಿಂದಾಗಿ ವರ್ಷಾಂತ್ಯಕ್ಕೆ ನಡೆಯುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಲಾಭವಾಗಲಿದೆ ಎಂಬ ಪ್ರಶ್ನೆಗಳಿಗೆ ಇಂದು ಉತ್ತರ ಸಿಕ್ಕಿದೆ.
ಇನ್ನು ಪಶ್ಚಿಮ ಬಂಗಾಳದ ಒಂದು ವಿಧಾನಸಭೆ ಮತ್ತು ಒಂದು ಲೋಕಸಭೆ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ವಶದಲ್ಲಿದ್ದ ನೋಪರಾ ಕ್ಷೇತ್ರವನ್ನು ವಶಕ್ಕೆ ಪಡೆದಿದೆ. ಅಲ್ಲದೆ ಉಲುಬೆರಿಯಾ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.