ಚೆನ್ನೈ: ಏರ್ ಲೈನ್ ವೊಂದಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.
ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಚೆನ್ನೈಗೆ ಆಗಮಿಸುವ ಕೆಲವೇ ಗಂಟೆಗಳ ಮುನ್ನ ಬಾಂಬ್ ಬೆದರಿಕೆ ಕರೆ ಬಂದಿದ್ದು, ತೀವ್ರ ಆತಂಕಕ್ಕಿಡುಮಾಡಿದೆ.
ಚೆನ್ನೈ ಮತ್ತು ಹೈದರಾಬಾದ್ ನಡುವೆ ಸಂಚರಿಸುವ ಏರ್ ಲೈನ್ ಗೆ ಈ ಬೆದರಿಕೆ ಕರೆ ಬಂದಿದೆ. ಹೀಗಾಗಿ ಸ್ಥಳದಲ್ಲಿ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಆಗಮಿಸಿದ್ದು ಪರಿಶೀಲಿಸುತ್ತಿದ್ದಾರೆ. ಬೆದರಿಕೆ ಕರೆ ಬಗ್ಗೆ ತನಿಖೆ ಆರಂಭವಾಗಿದೆ.