ರಾಂಚಿ: ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಶನಿವಾರ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾಲು ಅವರನ್ನು ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹೃದಯವಿಜ್ಞಾನ ವಿಭಾಗಕ್ಕೆ ದಾಖಲಿಸಲಾಗಿದ್ದು, ವೈದ್ಯರು ಇಸಿಜೆ ಮತ್ತು ಇತರೆ ಪರೀಕ್ಷೆಗಳನ್ನು ನಡೆಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.
ಲಾಲು ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಮತ್ತು ಆರ್ ಜೆಡಿಯ ಹಿರಿಯ ನಾಯಕರು ಹಾಗೂ ನೂರಾರು ಬೆಂಬಲಿಗರು ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ.
ಮೇವು ಹಗರಣದ 3ನೇ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಲಾಲು ಪ್ರಸಾದ್ ಯಾದವ್ ಅವರು ಬಿರ್ಸಾ ಮುಂಡಾ ಕೇಂದ್ರಿಯ ಕಾರಾಗೃಹದಲ್ಲಿ ಜೈಲು ವಾಸ ಅನುಭವಿಸುತ್ತಿದ್ದಾರೆ.