ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆಯೇ ಮೋದಿ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡಬೇಕೆಂದು ಟಿಡಿಪಿ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರು ಪಟ್ಟು ಹಿಡಿದು ಕುಳಿತಿದ್ದರು. ಅಲ್ಲದೆ, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಆರಂಭಿಸಿದರು. ನಮಗೆ ನ್ಯಾಯ ಬೇಕೆಂದು ಘೋಷಣೆ ಕೂಗಲು ಆರಂಭಿಸಿದರು. ಬಳಿಕ ಮಧ್ಯೆ ಪ್ರವೇಶಿಸಿದ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ನಾಯಕರನ್ನು ಸಮಾಧಾನ ಪಡಿಸಿ ತಮ್ಮ ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳುವಂತೆ ಮನವಿ ಮಾಡಿಕೊಂಡರು. ಆದರೂ, ಸಮಾಧಾನ ಗೊಳ್ಳದ ಸಂಸದರು ಮತ್ತಷ್ಟು ಗದ್ದಲವನ್ನುಂಟು ಮಾಡಲು ಆರಂಭಿಸಿದ್ದರು. ಈ ಹಿನ್ನಲೆಯಲ್ಲಿ ಲೋಕಸಭೆಯನ್ನು ನಾಳೆಗೆ ಮುಂದೂಡಲಾಯಿತು.