ಗೋರಖಪುರ: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರಿಗಿಂತ ಮೊಹಮ್ಮದ್ ಅಲಿ ಜಿನ್ನಾ ಅವರ ಕೊಡುಗೆ ಕಡಿಮೆ ಎನಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಪ್ರವೀಣ್ ನಿಶಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೊಹಮ್ಮದ್ ಅಲಿ ಜಿನ್ನಾ ಹೆಸರಲ್ಲಿ ಬಿಜೆಪಿ ಕೊಳಲು ರಾಜಕೀಯ ಮಾಡುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧಿಜೀ ಮತ್ತು ನೆಹರು ನೀಡಿದ ಕೊಡುಗೆಯಷ್ಟೇ ಜಿನ್ನಾ ಅವರು ಸಹ ನೀಡಿದ್ದಾರೆ ಎನ್ನುವುದನ್ನು ಮರೆಯುವಂತಿಲ್ಲ ಎಂದು ಹೇಳಿ ಪ್ರವೀಣ್ ಜಿನ್ನಾ ವಿವಾದಕ್ಕೆ ತುಪ್ಪ ಸುರಿದಿದ್ದಾರೆ.
ದೇಶದ ಸ್ವಾತಂತ್ರ್ಯಕ್ಕೆ ಹಿಂದೂ-ಮುಸ್ಲಿಂರು ಸಮಾನ ಕೊಡುಗೆ ನೀಡಿದ್ದಾರೆ. ಆದರೆ ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಕೋಮು ಕಲಭೆಗಳನ್ನು ಪ್ರಚೋದಿಸುತ್ತಿದ್ದಾರೆ. ಇದು 2019ರ ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಧರ್ಮದ ಹೆಸರಲ್ಲಿ ದೇಶ ವಿಭಜನೆಯ ಪ್ರಯತ್ನವಾಗಿದೆ ಎಂದರು.
ಬಿಜೆಪಿಯ ಇಂಥ ಕೊಳಕು ರಾಜಕೀಯದಾಟಕ್ಕೆ ನಾವು ಅವಕಾಶ ನೀಡುವುದಿಲ್ಲ. ಭಾರತ ಪ್ರತಿಯೊಬ್ಬ ಭಾರತೀಯನಿಗೂ ಸೇರಿದ್ದು ದೇಶದ ಏಕತೆಗೆ ಭಂಗ ತರಲು ಯಾರೊಬ್ಬರಿಗೂ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.