ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರ ನಿರ್ಧಾರ ಸರಿಯಾಗಿದೆ ಎಂದು ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಅವರು ಗುರುವಾರ ಸಮರ್ಥಿಸಿಕೊಂಡಿದ್ದಾರೆ.
ಪ್ರಕರಣ ಈಗ ಸುಪ್ರೀಂ ಕೋರ್ಟ್ ನಲ್ಲಿದೆ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಇಷ್ಟೊಂದು ತುರ್ತಾಗಿ ಸುಪ್ರೀಂಗೆ ಹೋಗ ಅಗತ್ಯ ಇರಲಿಲ್ಲ ಎಂದು ಟೀಕಿಸಿದ್ದಾರೆ.
ರಾಜ್ಯಪಾಲರು ಯಾವುದೇ ತಪ್ಪು ನಿರ್ಧಾರ ತೆಗೆದುಕೊಂಡಿದ್ದರೆ ಅದನ್ನು ರದ್ದುಪಡಿಸುವ ಅಧಿಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಇದೆ. ಆದರೆ ತುರ್ತು ವಿಚಾರಣೆಯ ಅಗತ್ಯ ಇರಲಿಲ್ಲ ಎಂದಿದ್ದಾರೆ.
ಸರ್ಕಾರ ರಚಿಸಲು ಯಾರಿಗೆ ಅಹ್ವಾನ ನೀಡಬೇಕು ಎಂಬುದು ರಾಜ್ಯಪಾಲರಿಗೆ ಬಿಟ್ಟ ವಿಚಾರ ಮತ್ತು ವಜುಭಾಯಿ ವಾಲಾ ಅವರು ಸರಿಯಾದ ನಿರ್ಧಾರವೇ ತೆಗೆದುಕೊಂಡಿದ್ದಾರೆ ಎಂದು ರೋಹಟ್ಗಿ ಹೇಳಿದ್ದಾರೆ.
ಸರ್ಕಾರ ರಚಿಸಲು ಬಿಜೆಪಿ ಆಹ್ವಾನ ನೀಡಿದ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿಗಳಾದ ಎಕೆ ಸಿಕ್ರಿ, ಅಶೋಕ್ ಭೂಷಣ್ ಮತ್ತು ಎಸ್ ಎ ಬೊಬ್ಡೆ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸಲಿದೆ.
ಇಂದು ಬೆಳಗ್ಗೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.