ನವದೆಹಲಿ: ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯವಾದ ಅನುಮತಿಯನ್ನು ಪಡೆಯಲಾಗಿದೆ ಎಂದು ಸಿಬಿಐ ಸೋಮವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ.
ಏರ್ ಸೆಲ್ ಮ್ಯಾಕ್ಸಿಸ್ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಇತರೆ ಆರೋಪಿಗಳ ವಿಚಾರಣೆಗೆ ಅನುಮತಿ ಪಡೆಯಲು ಎರಡು ವಾರಗಳ ಕಾಲಾವಕಾಶ ಬೇಕು ಎಂದು ಸಿಬಿಐ ಇಂದು ಕೋರ್ಟ್ ಗೆ ಹೇಳಿದೆ.
ಈ ಮಧ್ಯೆ, ಪ್ರಕರಣದಲ್ಲಿ ಆರೋಪಿಗಳಾಗಿರುವ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಬಂಧನಕ್ಕೆ ನೀಡಲಾಗಿರುವ ಮಧ್ಯಂತರ ರಕ್ಷಣೆಯನ್ನು ಕೋರ್ಟ್ ಡಿಸೆಂಬರ್ 18ರ ವರೆಗೆ ವಿಸ್ತರಿಸಿದೆ.
ಚಿದಂಬರಂ ಅವರು 2006ರಲ್ಲಿ ಹಣಕಾಸು ಸಚಿವರಾಗಿದ್ದ ವೇಳೆ ವಿದೇಶಿ ಕಂಪನಿಗೆ ವಿದೇಶಿ ಹೂಡಿಕೆ ಪ್ರಚಾರ ಮಂಡಳಿ(ಎಫ್ಐಪಿಬಿ) ಮಂಜೂರಾತಿ ನೀಡಿದ್ದು ಹೇಗೆ ಎಂಬ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ.