ನವದೆಹಲಿ: ಸಿಬಿಐ (ಕೇಂದ್ರೀಯ ತನಿಖಾ ದಳ) ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಅ.26 ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಗುರುವಾರ ನಿರ್ಧರಿಸಿದೆ.
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾ ಅವರು, ರಾಜಧಾನಿ ದೆಹಲಿಯಲ್ಲಿರುವ ಸಿಬಿಐ ಪ್ರಧಾನ ಕಚೇರಿಯ ಹೊರಾಂಗಣದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ ಮುಖ್ಯ ನಾಯಕರುಗಳು ಆಯಾ ರಾಜ್ಯಗಳ ಸಿಬಿಐ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸುತ್ತಾರೆಂದು ಹೇಳಿದ್ದಾರೆ.
ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾಗಿರುವ ಕೇಂದ್ರೀಯ ತನಿಖಾ ದಳದ ಪ್ರತಿಷ್ಠೆಗೆ ಕುಂದುಂಟಾಗುವಂತೆ ವರ್ತಿಸಿದ ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಹಾಗೂ ಉಪಮುಖ್ಯಸ್ಥ ರಾಕೇಶ್ ಅಸ್ಥಾನಾ ಅವರ ಅಧಿಕಾರಕ್ಕೆ ಕೇಂದ್ರ ಸರ್ಕಾರ ನಿನ್ನೆಯಷ್ಟೇ ಕತ್ತರಿ ಪ್ರಯೋಗ ಮಾಡಿತ್ತು.
ಬಹಿರಂಗವಾಗಿ ಕಿತ್ತಾಡುವ ಮೂಲಕ ಸಿಬಿಐನ ಮರ್ಯಾದೆಯನ್ನು ಹರಾಜು ಹಾಕಿದ್ದ ಇಬ್ಬರೂ ಉನ್ನತಾಧಿಕಾರಿಗಳನ್ನು ಮಂಗಳವಾರ ತಡರಾತ್ರಿ ರಜೆ ಮೇಲೆ ಕಳುಹಿಸಿತ್ತು. ಬಳಿಕ ಸಿಬಿಐನ ಜಂಟಿ ನಿರ್ದೇಶಕರಾಗಿರುವ ಒಡಿಶಾ ಕೇಡರ್ ಐಪಿಎಸ್ ಅಧಿಕಾರಿ ಎಂ.ನಾಗೇಶ್ವರ ರಾವ್ ಅವರಿಗೆ ಸಿಬಿಐನ ಹೊಣೆಗಾರಿಕೆಯನ್ನು ಹಂಗಾನಿಯಾಗಿ ವಹಿಸಿತ್ತು.