ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ
ದೇಶ
ಸಿಬಿಐ ಒಳಜಗಳ: 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಲು ಸಿವಿಸಿಗೆ ಸುಪ್ರೀಂ ಕೋರ್ಟ್ ಸೂಚನೆ
ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಅವರ ಮೇಲಿನ ಆರೋಪಗಳ ಕುರಿತು 10 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸುವಂತೆ...
ನವದೆಹಲಿ: ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಅವರ ಮೇಲಿನ ಆರೋಪಗಳ ಕುರಿತು 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸುವಂತೆ ಸಿವಿಸಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.
ಕೇಂದ್ರ ಸರ್ಕಾರದ ರಾತ್ರೋರಾತ್ರಿ ಕಡ್ಡಾಯ ರಜೆ ಪ್ರಶ್ನಿಸಿ ಅಲೋಕ್ ವರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿ ಎಸ್.ಕೆ.ಕೌಲ್ ಮತ್ತು ಕೆ.ಎಂ. ಜೋಸೆಫ್ ಅವರಿದ್ದ ಪೀಠ, 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸಿವಿಸಿಗೆ ಸೂಚನೆ ನೀಡಿದೆ.
ಅಲೋಕ್ ವರ್ಮಾ ಪರವಾಗಿ ಹಿರಿಯ ವಕೀಲ ಫಾಲಿ ನಾರಿಮನ್ ಹಾಗೂ ಸಂಜಯ್ ಹೆಗ್ಡೆಯವರು ವಾದ ಮಂಡಿಸಿದ್ದರು. ಕೇಂದ್ರ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ವಾದ ಮಂಡಿಸಿದರು.
ವಿಚಾರಣೆ ವೇಳೆ ವಾದ ಮಂಡಿಸಿದ ಸಿವಿಸಿ ಪರ ವಕೀಲರು ತನಿಖೆಗೆ ಹೆಚ್ಚಿನ ಸಮಯ ನೀಡುವಂತೆ ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡರು. ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಈ ವಿಚಾರದಲ್ಲಿ ಹೆಚ್ಚಿನ ಸಮಯ ನೀಡಲು ಸಾಧ್ಯವಿಲ್ಲ. ದೇಶದ ಹಿತದೃಷ್ಟಿಯಿಂದ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಅಲೋಕ್ ವರ್ಮಾ ವಿರುದ್ಧ ಕೇಳಿ ಬಂದಿರುವ ಆರೋಪ ಸಂಬಂಧ 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿತು.
ಅಲ್ಲದೆ, ಸಿಬಿಐ ಹಂಗಾಮಿ ನಿರ್ದೇಶಕ ನಾಗೇಶ್ವರ್ ರಾವ್ ಅವರು ಯಾವುದೇ ನಿರ್ಧಾರಗಳನ್ನು ಕೈಗೊಳ್ಳದಂತೆ ತಿಳಿಸಿದ ನ್ಯಾಯಾಲಯ, ಕೇವಲ ದೈನಂದಿನ ಕಾರ್ಯ ನೋಡಿಕೊಳ್ಳಬಹುದು ಎಂದು ಹೇಳಿದೆ.
ಪ್ರಕರಣ ಸಂಬಂಧ ಕೇಂದ್ರ ಹಾಗೂ ಸಿವಿಸಿಗೆ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ, ಸಿಬಿಐ ಹಂಗಾಮಿ ನಿರ್ದೇಶಕ ರಾವ್ ಅಧಿಕಾರ ವಹಿಸಿಕೊಂಡ ಬಳಿಕ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ತಿಳಿಸುವಂತೆ ಸೂಚನೆ ನೀಡಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ