ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರಿಗೆ ಶಿಫಾರಸು ಮಾಡಲು ತಮಿಳುನಾಡು ಸಚಿವ ಸಂಪುಟ ಭಾನುವಾರ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮೀನುಗಾರಿಕೆ ಸಚಿವ ಡಿ ಜಯಕುಮಾರ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಸಂವಿಧಾನದ 161ನೇ ವಿಧಿಯನ್ವಯ ಎಲ್ಲಾ ಏಳು ಹಂತಕರನ್ನು ಬಿಡುಗಡೆ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕಳೆದ 27 ವರ್ಷಗಳಿಂದ ಜೈಲಿನಲ್ಲಿರುವ ರಾಜೀವ್ ಗಾಂಧಿ ಹಂತಕರಾದ ನಳಿನಿ ಶ್ರೀಹರಿಹರನ್, ಮುರುಗನ್, ಪೆರಾರಿವಾಲನ್, ರಾಬರ್ಟ್ ಪಯಾಸ್, ರವಿಚಂದ್ರನ್, ಸಂತಾನ್, ಜಯಕುಮಾರ್ ಅವರನ್ನು ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.