ಗುವಾಹತಿ: ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಈಶಾನ್ಯ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ತಾಳಿದ್ದು, ಅಸ್ಸಾಂನಲ್ಲಿ ಪ್ರತಿಭಟನಾಕಾರರು ಕೇಂದ್ರ ಸಚಿವರ ಮನೆ ಮೇಲೆ ದಾಳಿ ಮಾಡಿದ್ದಾರೆ.
ಅಸ್ಸಾಂ ದಿಬ್ರುಗಢ್ ನ ದುಲಿಯಾಜನ್ ಪ್ರದೇಶದಲ್ಲಿರುವ ಸಂಸದ ಮತ್ತು ಕೇಂದ್ರ ಆಹಾರ ಸಂಸ್ಕರಣಾ ರಾಜ್ಯ ಸಚಿವರಾದ ರಾಮೇಶ್ವರ್ ತೇಲಿ ಅವರ ನಿವಾಸದ ಮೇಲೆ ಪ್ರತಿಭಟನಾಕಾರರು ದಾಳಿ ಮಾಡಿದ್ದು, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೆ ಮನೆ ಅವರಣದಲ್ಲಿ ಬೆಂಕಿ ಹಚ್ಚಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಅದೃಷ್ಟವಶಾತ್ ಈ ವೇಳೆ ಮನೆಯಲ್ಲಿದ್ದ ಯಾರಿಗೂ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ಇದಕ್ಕೂ ಮೊದಲು ಅಸ್ಸಾಂ ಸಿಎಂ ಸರ್ಬಾನಂದ ಸೋನಾವಾಲ್ ಅವರ ದಿಬ್ರುಘಡ್ ನಿವಾಸದ ಮೇಲೂ ಪ್ರತಿಭಟನಾಕಾರರು ಕಲ್ಲು ತೂರಾಟ ಮಾಡಿದ್ದರು. ಅಲ್ಲದೆ ಬಿಜೆಪಿ ಶಾಸಕ ಪ್ರಶಾಂತ ಫುಕನ್ ಮತ್ತು ಬಿಜೆಪಿ ಮುಖಂಡ ಸುಭಾಷ್ ದತ್ತಾ ಅವರ ಮನೆ ಮೇಲೂ ಪ್ರತಿಭಟನಾಕಾರರು ದಾಳಿ ಮಾಡಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಕೊಂಡಿರುವ ಪೊಲೀಸರು ಈ ಕುರಿತಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
Advertisement