

ನವದೆಹಲಿ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ದೆಹಲಿಯಲ್ಲಿ ಎಲ್ಲಾ ಏಳು ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಮೋದಿ-ಶಾ ಸರ್ವಾಧಿಕಾರಿ ಆಡಳಿತವನ್ನು ಕೊನೆಗಾಣಿಸುವುದಾಗಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಬಿಜೆಪಿ ಗೆದ್ದರೆ ಚುನಾವಣೆಯನ್ನೇ ತೆಗೆದು ಹಾಕಲು ಸಂಚು ರೂಪಿಸುತ್ತಿದೆ ಎಂದು ಕೂಡ ಅವರು ಆರೋಪಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಂವಿಧಾನದ ಬಗ್ಗೆ ಸ್ವಲ್ಪವಾದರೂ ತಿಳುವಳಿಕೆ ಇರುತ್ತಿದ್ದರೆ ಅವರು ಇಂತಹ ಹೇಳಿಕೆ ನೀಡುತ್ತಿರಲಿಲ್ಲ ಎಂದಿದ್ದಾರೆ.
ನಿನ್ನೆ ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಜರ್ಮನಿಯಲ್ಲಿ ಹಿಟ್ಲರ್ ಅಧಿಕಾರದಲ್ಲಿದ್ದಂತಹ ಸಂದರ್ಭದಲ್ಲಿ ಯಾವ ರೀತಿ ಆಡಳಿತ ಇತ್ತು, ಅದೇ ರೀತಿ ಈಗ ಭಾರತದಲ್ಲಿ ಮೋದಿ ಆಡಳಿತವಿದೆ ಎಂದು ಆಪಾದಿಸಿದ್ದಾರೆ.
ಇತ್ತೀಚೆಗೆ ರ್ಯಾಲಿಯೊಂದರಲ್ಲಿ ಮಾತನಾಡಿದ್ದ ಅಮಿತ್ ಶಾ, ಬಿಜೆಪಿ 2019ರಲ್ಲಿ ಚುನಾವಣೆಯಲ್ಲಿ ಗೆದ್ದರೆ ಮುಂದಿನ 50 ವರ್ಷಗಳ ಕಾಲ ಅಧಿಕಾರದಲ್ಲಿರುತ್ತೇವೆ ಎಂದು ಹೇಳಿಕೆ ಕೊಟ್ಟಿದ್ದರು. ಇದು ಬಿಜೆಪಿಯ ತಂತ್ರವಾಗಿದೆ. ಜರ್ಮನಿಯಲ್ಲಿ ಹಿಟ್ಲರ್ ಮಾಡಿದ ರೀತಿಯಲ್ಲಿ ಬಿಜೆಪಿ ಕೂಡ ಇಲ್ಲಿ ಸಂವಿಧಾನವನ್ನು ತಿದ್ದುಪಡಿ ಮಾಡಿ ಒಟ್ಟಾರೆಯಾಗಿ ಚುನಾವಣೆಯನ್ನೇ ತೆಗೆದುಹಾಕಲು ನೋಡುತ್ತಿದೆ. ಮೋದಿಯವರು ಅಧಿಕಾರಕ್ಕೆ ಬಂದರೆ ಬಿಜೆಪಿ ಸಂವಿಧಾನವನ್ನು ಬದಲಿಸಿ ಚುನಾವಣೆ ಮತ್ತು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಹೊರಟಿದೆ ಎಂದು ಕೇಜ್ರಿವಾಲ್ ಟೀಕಿಸಿದರು.
Advertisement