ನವದೆಹಲಿ: ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ಅವರು ದಾಖಲಿಸಿರುವ ಮಾನಹಾನಿ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಕೋರ್ಟ್, ಆರೋಪಿ, ಪತ್ರಕರ್ತೆ ಪ್ರಿಯಾ ರಮಣಿ ಅವರಿಗೆ ಸಮನ್ಸ್ ನೀಡುವ ಕುರಿತು ಜನವರಿ 29ಕ್ಕೆ ತೀರ್ಪು ಕಾಯ್ದಿರಿಸಿದೆ.
ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಬರ್ ಪರ ವಕೀಲ ವಾದ ಆಲಿಸಿದ ಹೆಚ್ಚುವರಿ ಮುಖ್ಯ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು, ಆದೇಶ ಕಾಯ್ದಿರಿಸಿದ್ದಾರೆ.
ರಮಣಿ ಅವರು 20 ವರ್ಷಗಳ ಹಿಂದೆ ಎಂ.ಜೆ.ಅಕ್ಬರ್ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಎಂ.ಜೆ. ಅಕ್ಬರ್ ಅವರು ಕಳೆದ ವರ್ಷ ಅಕ್ಟೋಬರ್ 17ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಪ್ರಿಯಾ ರಮಣಿ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದರು.