ನವದೆಹಲಿ: 'ವಂದೇ ಮಾತರಂ' ಗೀತೆಯನ್ನು ರಾಷ್ಟಗೀತೆ ಇಲ್ಲವೇ ರಾಷ್ಟ್ರೀಯ ಹಾಡು ಎಂದು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಬಿಜೆಪಿ ನಾಯಕ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಹಾಗೂ ನ್ಯಾ.ಸಿ.ಹರಿಶಂಕರ್ ಅವರಿದ್ದ ವಿಭಾಗೀಯ ಪೀಠ, ಸಂವಿಧಾನದ 226ನೇ ವಿಧಿ ಅನುಸಾರ, ಈ ಅರ್ಜಿಯನ್ನು ಪರಿಗಣಿಸಲು ಯಾವುದೇ ಕಾರಣಗಳಿಲ್ಲ ಎಂದು ಸ್ಪಷ್ಟಪಡಿಸಿತು.
ವಂದೇ ಮಾತರಂ ಅನ್ನು ರಾಷ್ಟ್ರಗೀತೆ ಅಥವಾ ರಾಷ್ಟ್ರೀಯ ಹಾಡು ಎಂದು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಅರ್ಜಿದಾರರು ಸೂಕ್ತ ಕಾರಣಗಳನ್ನು ನೀಡಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ಬಂಕಿಮ್ ಚಂದ್ರ ಚಟರ್ಜಿ ಅವರು ಬರೆದ 'ವಂದೇ ಮಾತರಂ' ಗೀತೆಗೆ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರ ನಾಥ್ ಠಾಗೂರ್ ವಿರಚಿತ ರಾಷ್ಟ್ರಗೀತೆ 'ಜನ ಗಣ ಮನ' ಕ್ಕೆ ನೀಡಲಾಗುತ್ತಿರುವ ಗೌರವವನ್ನೇ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.