ಮೀರತ್: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಬಂಧನಕ್ಕೊಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಲಿತ ನಾಯಕ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ಭೇಟಿ ಮಾಡಿದ್ದಾರೆ.
ಮೀರತ್ನ ಆಸ್ಪತ್ರೆಯೊಂದರಲ್ಲಿ ದಾಖಲಾಗಿರುವ ಆಜಾದ್ ಅವರನ್ನು ಕಾಂಗ್ರೆಸ್ಸಿಗರು ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದ್ದು, ದಲಿತ ನಾಯಕನನ್ನು ಒಲಿಸಿಕೊಂಡು ದಲಿತರ ಬೆಂಬಲ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ವಾಹನಗಳ ಮೂಲಕ ಬೃಹತ್ ಮೆರವಣಿಗೆ ನಡೆಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಆಜಾದ್ ಅವರನ್ನು ಮಂಗಳವಾರ ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದರು. ನಂತರ ಅಸ್ವಸ್ಥಗೊಂಡ ಅವರನ್ನು ಮೀರತ್ನ ಆನಂದ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರ ಪ್ರದೇಶದ ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿರುವ ಜ್ಯೋತಿರಾದಿತ್ಯ ಸಿಂಧ್ಯ ಹಾಗೂ ಪ್ರಿಯಾಂಕಾ ಗಾಂಧಿ ಅವರು ಆನಂದ್ ಆಸ್ಪತ್ರೆಗೆ ಹೋಗಿ ಆಜಾದ್ ಅವರನ್ನು ಭೇಟಿ ಮಾಡಿದ್ದಾರೆ.