'ಚೌಕಿದಾರ್ ಚೋರ್' ಎಂದು ಎಲ್ಲಿ ಹೇಳಿದ್ದೇವೆ..?; ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆ!

ರಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನೀಡಿದ್ದ 'ಚೌಕಿದಾರ್ ಚೋರ್' ಹೇಳಿಕೆ ಇದೀಗ ಅವರನ್ನು ಬಿಟ್ಟೂ ಬಿಡದಂತೆ ಕಾಡುತ್ತಿದೆ..
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ನವದೆಹಲಿ: ರಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನೀಡಿದ್ದ 'ಚೌಕಿದಾರ್ ಚೋರ್' ಹೇಳಿಕೆ ಇದೀಗ ಅವರನ್ನು ಬಿಟ್ಟೂ ಬಿಡದಂತೆ ಕಾಡುತ್ತಿದ್ದು, ಸುಪ್ರೀಂ ಕೋರ್ಟ್ ನಲ್ಲಿ ರಾಹುಲ್ ಕ್ಷಮೆ ಕೋರಿದ್ದರೂ, ರಾಹುಲ್ ಗಾಂಧಿ ಕ್ಷಮಾಪಣೆಗೆ ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ಸಮಾಧಾನವಾಗಿಲ್ಲ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಈ ಸಂಬಂಧ ಮತ್ತೊಂದು ಪ್ರಮಾಣ ಪತ್ರ ಸಲ್ಲಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿ ಅವರಿಗೆ ಸೂಚನೆ ನೀಡಿದೆ.
ಹೌದು.. ನಿನ್ನೆ 'ಚೌಕಿದಾರ್ ಚೋರ್' ಹೇಳಿಕೆ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುುಂದೆ ಕ್ಷಮೆ ಕೋರಿದ್ದರು. ಆದರೆ ತಮ್ಮ ಹೇಳಿಕೆ ಕುರಿತು ನೇರವಾಗಿ ತಪ್ಪೊಪ್ಪಿಕೊಳ್ಳದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ನಡೆ ಬಗ್ಗೆ ಸುಪ್ರೀಂ ಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದೆ.
ಈ ಕುರಿತು ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ನಿನ್ನೆ ನಡೆದ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠ ತೀವ್ರ ತರಾಟೆಗೆ ತೆಗೆದುಕೊಂಡಿದೆ ಎನ್ನಲಾಗಿದೆ. ಈ ವೇಳೆ, ಸಿಜೆಐ ರಂಜನ್‌ ಗೊಗೊಯಿ ನೇತೃತ್ವದ ಪೀಠವು, 'ನೀವು ತಪ್ಪು ಮಾಡಿದ್ದರೆ, ಒಪ್ಪಿಕೊಳ್ಳಬೇಕು.. ಪ್ರಮಾಣಪತ್ರದಲ್ಲಿನ ನಿಮ್ಮ ಸಮರ್ಥನೆಗಳನ್ನು ಅರ್ಥ ಮಾಡಿಕೊಳ್ಳುವುದು ನಮಗೆ ಕಷ್ಟವಾಗುತ್ತಿದೆ. ಪ್ರಮಾಣಪತ್ರದಲ್ಲಿ ಉಲ್ಲೇಖಿಸಿರುವ ರಾಜಕೀಯ ನಿಲುವುಗಳು ನಮಗೆ ಸಂಬಂಧವಿಲ್ಲದ್ದು.. ನಮ್ಮ ತೀರ್ಪಿನಲ್ಲಿ ಚೌಕಿದಾರ್ ಚೋರ್ ಎಂದು ಎಲ್ಲಿ ಹೇಳಿದ್ದೇವೆ? ಎಲ್ಲ ಹೇಳಿಕೆಗಳನ್ನು ಪೀಠವೇ ಹೇಳಿದೆ ಎಂದು ನೀವು ಹೇಗೆ ಹೇಳುತ್ತೀರಿ.. ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ ರಾಹುಲ್ ಗಾಂಧಿ ಅವರು ಸಲ್ಲಿಕೆ ಮಾಡಿರುವ ಪ್ರಮಾಣಪತ್ರದ ಕುರಿತೂ ಅಸಮಾಧಾನ ವ್ಯಕ್ತಪಡಿಸಿರುವ ಕೋರ್ಟ್, 'ಪ್ರಮಾಣಪತ್ರದಲ್ಲಿ ಬಳಸಿರುವ 'ವಿಷಾದ' ಪದದ ಅರ್ಥವೇನು?.. ಕಾಂಗ್ರೆಸ್‌ ಅಧ್ಯಕ್ಷರು ಒಂದು ಹಂತದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಳ್ಳುತ್ತಿದ್ದಾರೆ. ಆದರೆ, ಇನ್ನೊಂದೆಡೆ ನಿಂದನೆಯ ಹೇಳಿಕೆ ನೀಡಿಲ್ಲ ಎಂದು ಪ್ರತಿಪಾದಿಸುತ್ತಿದ್ದಾರೆ'..  ಎಂದು ಕೋರ್ಟ್ ರಾಹುಲ್‌ ಪರ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರಿಗೆ ಪ್ರಶ್ನಿಸಿದೆ ಎನ್ನಲಾಗಿದೆ.
ಇನ್ನು ಪೀಠದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ರಾಹುಲ್‌ ಪರ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು, 'ವಿಷಾದವು ಕ್ಷಮೆ ಇದ್ದಂತೆ. ಶಬ್ದಕೋಶದಲ್ಲೂ ನಾನು ಪರಿಶೀಲಿಸಿದ್ದೇನೆ. ಇನ್ನೂ ಉತ್ತಮವಾದ ಹಾಗೂ ಸ್ಪಷ್ಟವಾದ ಪ್ರಮಾಣಪತ್ರ ಸಲ್ಲಿಸಲು ಮುಂದಿನ ಸೋಮವಾರದವರೆಗೆ ಅವಕಾಶ ನೀಡಬೇಕು ಎಂದು ಕೋರಿದ್ದಾರೆ. ಈ ವೇಳೆ ಮತ್ತೆ ಕಿಡಿಕಾರಿದ ಸುಪ್ರೀಂ ಕೋರ್ಟ್,  'ಈ ವಿಷಯವನ್ನು ಇನ್ನೆಷ್ಟು ದಿನಗಳವರೆಗೂ ಕೊಂಡೊಯ್ಯುತ್ತೀರಿ’ ಎಂದು ಪ್ರಶ್ನಿಸಿತು. ಅಲ್ಲದೆ ಈಗಿರುವ ಪ್ರಮಾಣಪತ್ರದಲ್ಲಿನ ಗೊಂದಲಗಳನ್ನು ನಿವಾರಿಸಲು ಇನ್ನೊಂದು ಸ್ಪಷ್ಟವಾದ ಪ್ರಮಾಣಪತ್ರ ಸಲ್ಲಿಸುವಂತೆ ಸಿಂಘ್ವಿ ಅವರಿಗೆ ಪೀಠವು ಸೂಚಿಸಿತು.
ರಫೇಲ್‌ ಒಪ್ಪಂದಕ್ಕೆ ಸಂಬಂಧಿಸಿದಂತೆ 'ಚೌಕಿದಾರ್ ಚೋರ್' ಎನ್ನುವುದನ್ನು ಸುಪ್ರೀಂ ಕೋರ್ಟ್‌ ಹೇಳಿದೆ ಎಂದು ರಾಹುಲ್‌ ಗಾಂಧಿ ಈ ಹಿಂದೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿದ್ದಾರೆ. ಹೀಗಾಗಿ, ರಾಹುಲ್‌ ಗಾಂಧಿ ಸೋಮವಾರ ಪ್ರಮಾಣ ಪತ್ರ ಸಲ್ಲಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com