ಮುಂಬೈ: ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಹಾಗೂ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ 2018ರ ಮಾಲೆಗಾಂವ್ ಸ್ಫೋಟ ಪ್ರಕರಣದ ಏಳು ಆರೋಪಿಗಳಿಗೆ ವಾರಕ್ಕೆ ಒಂದು ದಿನ ವಿಚಾರಣೆಗೆ ಹಾಜರಾಗುವಂತೆ ವಿಶೇಷ ಕೋರ್ಟ್ ಶುಕ್ರವಾರ ಸೂಚಿಸಿದೆ.
ಆರೋಪಿಗಳು ಪ್ರಕರಣದ ವಿಚಾರಣೆಗೆ ಪದೇಪದೆ ಗೈರು ಆಗುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಎನ್ಐಎ ಕೋರ್ಟ್ ನ್ಯಾಯಾಧೀಶ ವಿನೋದ್ ಪಡಲ್ಕರ್ ಅವರು, ಸೂಕ್ತ ಕಾರಣವಿಲ್ಲದೆ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಲು ಸಾಧ್ಯವಿಲ್ಲ ಎಂದರು. ಪ್ರಕರಣದ ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಲಾಗಿದೆ.
ಪ್ರಗ್ಯಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಪುರೋಹಿತ್ ಹೊರತುಪಡಿಸಿ ನಿವೃತ್ತ ಮೇಜರ್ ರಮೇಶ್ ಉಪಾಧ್ಯಾಯ, ಅಜಯ್ ರಾಹಿರ್ಕರ್, ಸುಧಾಕರ್ ದ್ವಿವೇದಿ, ಸುಧಾಕರ್ ಚತುರ್ವೇದಿ ಮತ್ತು ಸಮೀರ್ ಕುಲಕರ್ಣಿ ಪ್ರಕರಣದ ಇತರ ಆರೋಪಿಗಳಗಿದ್ದಾರೆ. ಆದರೆ ಇವರೆಲ್ಲರೂ ಜಾಮೀನು ಪಡೆದು ಹೊರಗಿದ್ದಾರೆ.
2008ರ ಸೆಪ್ಟೆಂಬರ್ 29ರಂದು ಮಾಲೆಗಾಂವ್ ಪಟ್ಟಣದಲ್ಲಿ ಸಂಭವಿಸಿದ ಎರಡು ಬಾಂಬ್ ಸ್ಫೋಟದಲ್ಲಿ 7 ಮಂದಿ ಸಾವನ್ನಪ್ಪಿ 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಈ ಪ್ರಕರಣದ ಆರೋಪಿಗಳಾದ ಪ್ರಜ್ಞಾ ಠಾಕೂರ್ ಮತ್ತು ಕರ್ನಲ್ ಪುರೋಹಿತ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 120 ಬಿ, ಪ್ರಕರಣದ 302, 307, 304, 326, 427, 153 ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.