ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನಾ-ಬಿಜೆಪಿ ನಡುವಿನ ಅಧಿಕಾರ ಹಂಚಿಕೆ ಬಿಕ್ಕಟ್ಟು ಮುಂದುವರಿದಿದ್ದು, ಕೇಸರಿ ಪಕ್ಷ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದು, ಪ್ರತಿಪಕ್ಷಗಳ ಶಾಸಕರಿಗೆ ಹಣದ ಆಮಿಷ ಒಡ್ಡುತ್ತಿದೆ ಎಂಬ ಆರೋಪವನ್ನು ಬಿಜೆಪಿ ಸ್ಪಷ್ಟವಾಗಿ ತಳ್ಳಿಹಾಕಿದೆ.
ಶಾಸಕರ ಕುದುರೆ ವ್ಯಾಪಾರ ನಮ್ಮ ಪಕ್ಷದ ಸಂಸ್ಕೃತಿ ಅಲ್ಲ ಎಂದು ರಾಜ್ಯ ಬಿಜೆಪಿ ವಕ್ತಾರ ಕೇಶವ್ ಉಪಾಧ್ಯಾಯಿ ಅವರು ಹೇಳಿದ್ದಾರೆ.
ಬಿಜೆಪಿ ನಮ್ಮ ಪಕ್ಷದ ಶಾಸಕರಿಗೆ 25 ರಿಂದ 50 ಕೋಟಿ ರೂಪಾಯಿ ಹಣದ ಆಮಿಸ್ ಒಡ್ಡಿದೆ ಎಂದು ಕಾಂಗ್ರೆಸ್ ನಾಯಕ ವಿಜಯ್ ವಡೆತ್ತಿವಾರ್ ಅವರು ಆರೋಪಿಸಿದ್ದರು.
ಕಾಂಗ್ರೆಸ್ ಆರೋಪದ ಬಗ್ಗೆ ಪಿಟಿಐಗೆ ಪ್ರತಿಕ್ರಿಯಿಸಿದ ಉಪಾಧ್ಯಾಯಿ, ಬಿಜೆಪಿ ಕುದುರೆ ವ್ಯಾಪಾರ ನಡೆಸುವ ಪ್ರಶ್ನೆಯೇ ಇಲ್ಲ. ಅದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ. ಕಾಂಗ್ರೆಸ್ ಆರೋಪದ ಆಧಾರ ರಹಿತ ಎಂದು ಹೇಳಿದ್ದಾರೆ.
ಈ ಹಿಂದೆ 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತಿದ್ದ ಕಾಂಗ್ರೆಸ್ ಈ ಬಾರಿ 50 ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಹತಾಶೆಯಿಂದ ಈ ರೀತಿ ಆರೋಪ ಮಾಡುತ್ತಿದೆ ಎಂದಿದ್ದಾರೆ.
ಇನ್ನು ಮಿತ್ರ ಪಕ್ಷ ಶಿವಸೇನಾ ಸಹ ಬಿಜೆಪಿಯ ಶಾಸಕರ ಕುದುರೆ ವ್ಯಾಪಾರದ ಭಯದಿಂದ ತನ್ನ ಶಾಸಕರನ್ನು ಖಾಸಗಿ ಹೋಟೆಲ್ ಗೆ ಶಿಫ್ಟ್ ಮಾಡಿದೆ.
Advertisement
Advertisement