ನವದೆಹಲಿ: ಟಿಡಿಪಿ ನಾಯಕರ ಪಕ್ಷಾಂತರ ಪರ್ವ ಮುಂದುವರೆದಿದ್ದು, ಟಿಡಿಪಿ ಮುಖಂಡ ಹಾಗೂ ಮಾಜಿ ಸಚಿವ ಸಿ. ಆದಿನಾರಾಯಣ ರೆಡ್ಡಿ ಅವರು ಸೋಮವಾರ ಬಿಜೆಪಿ ಸೇರಿದರು.
ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಆದಿನಾರಾಯಣ ರೆಡ್ಡಿ ಅವರು ಇಂದು ದೆಹಲಿಯಲ್ಲಿ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.
ಆದಿನಾರಾಯಣ ರೆಡ್ಡಿ ಅವರು ಚಂದ್ರಬಾಬು ನಾಯ್ಡು ಅವರ ಸರಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಸೆಪ್ಟಂಬರ್ ನಲ್ಲಿ ಡಿಟಿಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಅವರು ಈಗ ಕೇಸರಿ ಪಕ್ಷಕ್ಕೆ ಸೇರಿದ್ದಾರೆ.
ಬಿಜೆಪಿ ಸೇರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆದಿನಾರಾಯಣ ರೆಡ್ಡಿ ಅವರು, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
Advertisement