ಭೋಪಾಲ್: ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ.70 ರಷ್ಟು ಉದ್ಯೋಗ ಮೀಸಲಾತಿ ಜಾರಿಗೊಳಿಸಲು ಕಾನೂನು ಜಾರಿಗೆ ತರಲಾಗುವುದು ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ಗುರುವಾರ ಹೇಳಿದ್ದಾರೆ.
ಇಂದು 73ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕಮಲ್ ನಾಥ್ ಅವರು, ರಾಜ್ಯದಲ್ಲಿ ಹೂಡಿಕೆಯನ್ನು ಆಕರ್ಷಿಸುವ ಮೂಲಕ ಯುವಕರಿಗೆ ಹೆಚ್ಚು ಹೆಚ್ಚು ಉದ್ಯೋಗ ಕಲ್ಪಿಸಲಾಗುವುದು ಎಂದರು.
ಕಳೆದ ಏಳು ತಿಂಗಳಲ್ಲಿ ರಾಜ್ಯಕ್ಕೆ 6,158 ಕೋಟಿ ರೂಪಾಯಿ ಬಂಡವಾಳ ಹರಿದುಬಂದಿದೆ. ರಾಜ್ಯ ಸರ್ಕಾರ ಪ್ರತಿ ಜಿಲ್ಲೆಯಲ್ಲೂ ಕೈಗಾರಿಕಾ ಪ್ರದೇಶ ನಿರ್ಮಿಸಲು ಯೋಜನೆ ರೂಪಿಸುತ್ತಿದೆ ಎಂದರು.
ರಾಜ್ಯದ ಕೈಗಾರಿಕೆಗಳಲ್ಲಿ ಶೇ.70ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ನೀಡುವುದನ್ನು ಕಡ್ಡಾಯಗೊಳಿಸುವುದಕ್ಕಾಗಿ ನಾವು ಕಾನೂನು ಜಾರಿಗೆ ತರುತ್ತಿದೇವೆ ಎಂದು ಕಮಲ್ ನಾಥ್ ತಿಳಿಸಿದರು.
ಕಳೆದ ವರ್ಷ ಡಿ.17ಕ್ಕೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗಲೇ ಕಮಲ್ನಾಥ್ ಅವರು ಸ್ಥಳೀಯರಿಗೆ ಶೇ. 70ರಷ್ಟು ಉದ್ಯೋಗ ಮೀಸಲಾತಿಯನ್ನು ಪ್ರಕಟಿಸಿದ್ದರು.
Advertisement