ಪಶು ವೈದ್ಯೆ 'ಹತ್ಯಾಚಾರ'; ವ್ಯಾಪಕ ಟೀಕೆಗಳ ಬಳಿಕ ಕೊನೆಗೂ ಮೌನಮುರಿದ ತೆಲಂಗಾಣ ಸಿಎಂ
ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡದೇ ಟೀಕೆಗಳಿಗೆ ತುತ್ತಾಗಿದ್ದ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ಕೊನೆಗೂ ತಮ್ಮ ಮೌನ ಮುರಿದಿದ್ದು, ಪ್ರಕರಣ ಸಂಬಂಧ ತ್ವರಿತ ವಿಚಾರಣೆಗೆ ಆದೇಶಿಸಿದ್ದಾರೆ.
ಈ ಕುರಿತಂತೆ ಭಾನುವಾರ ಸಭೆ ಬಳಿಕ ಸಿಎಂ ಕೆಸಿಆರ್ ಪ್ರಕರಣವನ್ನು ತ್ವರಿತ ವಿಚಾರಣೆ ನಡೆಸುವಂತೆ ಆದೇಶಿಸಿದ್ದು, ಇದಕ್ಕಾಗಿ ವಿಶೇಷ ತುರ್ತು ಮತ್ತು ತ್ವರಿತ ವಿಚಾರಣಾ ನ್ಯಾಯಪೀಠ ರಚನೆ ಮಾಡಲು ಆದೇಶ ನೀಡಿದ್ದಾರೆ. ಅಲ್ಲದೆ ಸಂತ್ರಸ್ಥೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿರುವ ಅವರು, ಸಂತ್ರಸ್ಥೆಯ ಪೋಷಕರಿಗೆ ತೆಲಂಗಾಣ ಸರ್ಕಾರ ಅಗತ್ಯ ನೆರವು ನೀಡಲು ಸಿದ್ಧವಾಗಿದೆ. ಕಾನೂನಾತ್ಮಕವಾಗಿ ಮಾತ್ರವಲ್ಲದೇ ಕುಟುಂಬಕ್ಕೆ ನೈತಿಕ ಸ್ಛೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಲಿದೆ. ಕುಟುಂಬಕ್ಕೆ ಬೇಕಾದ ಎಲ್ಲ ರೀತಿಯ ಅಗತ್ಯ ನೆರವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.
ಇನ್ನು ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣವನ್ನು ಭಯಂಕರ ಮತ್ತು ಅತ್ಯಂತ ನೀಚ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಯಾವುದೇ ಕಾರಣಕ್ಕೂ ಅತ್ಯಾಚಾರಿಗಳು ತಪ್ಪಿಸಿಕೊಳ್ಳದಂತೆ ಅವರಿಗೆ ಕಠಿಣ ಶಿಕ್ಷೆ ವಿಧಿಸುವ ಕಾರ್ಯ ಸರ್ಕಾರ ಮಾಡಲಿದೆ ಎಂದು ಹೇಳಿದ್ದಾರೆ. ಅಲ್ಲದೆ ಪ್ರಕರಣದ ಕುರಿತ ತೀರ್ಪು ಶೀಘ್ರವೇ ಹೊರಬರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ