ಪೌರತ್ವ ತಿದ್ದುಪಡಿ ಮಸೂದೆ ಭಾರತೀಯ ಮುಸ್ಲಿಮರ ಮೇಲೆ ಯಾವುದೇ ಪರಿಣಾಮವಿಲ್ಲ: ರಾಜ್ಯಸಭೆಯಲ್ಲಿ ಅಮಿತ್ ಶಾ

ದೇಶದಾದ್ಯಂತ ಭಾರೀ ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಂಡನೆ ಮಾಡಿದ್ದು, ಚರ್ಚೆ ಆರಂಭಗೊಂಡಿದೆ. 
ಅಮಿತ್ ಶಾ
ಅಮಿತ್ ಶಾ

ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಮಂಡಿಸಿದ ಕೇಂದ್ರ ಗೃಹ ಸಚಿವ: ಚರ್ಚೆ ಆರಂಭ

ನವದೆಹಲಿ: ದೇಶದಾದ್ಯಂತ ಭಾರೀ ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಂಡನೆ ಮಾಡಿದ್ದು, ಚರ್ಚೆ ಆರಂಭಗೊಂಡಿದೆ. 

ಮಸೂದೆ ಮಂಡಿಸಿದ ಬಳಿಕ ರಾಜ್ಯಸಭೆಯಲ್ಲಿ ಮಾತನಾಡಿರುವ ಗೃಹ ಸಚಿವ ಅಮಿತ್ ಶಾ ಅವರು, ಮಸೂದೆ ಕುರಿತು ಭಾರತೀಯ ಮುಸ್ಲಿಮರು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಮಸೂದೆ ಕುರಿತು ನಿಮ್ಮನ್ನು ಯಾರೇ ಹೆದರಿಸಲು ಬಂದಲೂ ನಾವು ಹೆದರಬೇಡಿ. ಸಂವಿಧಾನ, ಅಲ್ಪಸಂಖ್ಯಾತರ ಸಂಪೂರ್ಣ ರಕ್ಷಣೆಗಾಗಿ ಪ್ರಧಾನಿ ಮೋದಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ. 

ಸುದೀರ್ಘ ಚರ್ಚೆ ಬಳಿಕ ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ ಪಡೆದುಕೊಂಡಿತ್ತು. ಲೋಕಸಭೆಯಲ್ಲಿ ಭರ್ಜರಿ ಬಹುಮತ ಹೊಂದಿರುವ ಕಾರಣಕ್ಕೆ ವಿಧೇಯಕ ಅನುಮೋದನೆ ಪಡೆದುಕೊಳ್ಳುವುದು ಅಷ್ಟೊಂದು ಕಷ್ಟಕರವಾಗಿರಲಿಲ್ಲ. ಆದರೆ, ರಾಜ್ಯಸಭೆಯಲ್ಲಿ ಬಿಜೆಪಿಗೆ ಬಹುಮತವಿಲ್ಲ. ಅದಾಗ್ಯೂ ಇತರೆ ಪಕ್ಷಗಳ ನೆರವಿನೊಂದಿಗೆ ಮಸೂದೆಗೆ ಸದನದ ಒಪ್ಪಿಗೆ ಪಡೆದುಕೊಳ್ಳುವ ತೀವ್ರ ವಿಶ್ವಾಸದಲ್ಲಿ ಬಿಜೆಪಿ ಇದೆ. 

245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಹಾಲಿ 238 ಸದಸ್ಯರು ಇದ್ದಾರೆ. ಬಹುಮತಕ್ಕೆ 120 ಸ್ಥಾನ ಬೇಕು. ಎನ್'ಡಿಎ 105 ಸದಸ್ಯರನ್ನು ಹೊಂದಿದೆ. ಬಿಜೆಪಿ 83, ಜೆಡಿಯು 6, ಅಕಾಲಿದಳ 3 ಹಾಗೂ ಲೋಕಜನಶಕ್ತಿ, ಆರ್'ಪಿಐ ತಲಾ ಒಬ್ಬ ಸದಸ್ಯರನ್ನು ಹೊಂದಿವೆ. ಇದಲ್ಲದೆ 11 ನಾಮನಿರ್ದೇಶಿತ ಸದಸ್ಯರು ಎನ್'ಡಿಎ ಜೊತೆ ಗುರುತಿಸಿಕೊಂಡಿದ್ದಾರೆ. 

ಇದರ ಜೊತೆಗೆ ಎಐಎಡಿಎಂಕೆಯ 11, ಬಿಜೆಡಿಯ 7, ವೈಎಸ್ಆರ್ ಕಾಂಗ್ರೆಸ್, ತೆಲುಗು ದೇಶಂ ಪಕ್ಷ ತಲಾ 2 ಸದಸ್ಯರು ವಿಧೇಯಕವನ್ನು ಬೆಂಬಲಿಸುವ ವಿಶ್ವಾಸವನ್ನು ಬಿಜೆಪಿ ಹೊಂದಿದೆ. ಈ 22 ಸದಸ್ಯರು ಸೇರಿದರೆ ಬಹುಮತ ಸಂಖ್ಯೆಯಾದ 120ನ್ನು ದಾಟಿ ಬಿಜೆಪಿ 127 ಮತಗಳನ್ನು ಪಡೆಯಲಿದೆ. ಬಿಜೆಪಿಯು ಬೆಂಬಲ ನಿರೀಕ್ಷಿಸುತ್ತಿರುವ ಪಕ್ಷಗಳು ಲೋಕಸಭೆಯಲ್ಲಿ ಮಸೂದೆಯನ್ನು ಬೆಂಬಲಿಸಿದ್ದವು ಎಂಬುದು ಗಮನಾರ್ಹ. 

ಭಾರತದ ನೆರೆಯ ರಾಷ್ಟ್ರಗಳಿಂದ ಅಂದರೆ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳ ಅನುಭವಿಸಿ ಭಾರತಕ್ಕೆ ವಲಸೆ ಬಹಂದಿರುವ 6 ಧಾರ್ಮಿಕ  ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತದ ಪೌರತ್ವ ನೀಡುವ ಮಸೂದೆಯೇ ಪೌರತ್ವ ತಿದ್ದುಪಡಿ ಮಸೂದೆ-2019. 

ಹಳೆಯ ಕಾಯ್ದೆಯಲ್ಲಿ ವಿದೇಶಿಗರು ಕಾನೂನು ಬದ್ಧವಾಗಿ ಭಾರತಕ್ಕೆ ವಲಸೆ ಬಂದು ಇಲ್ಲಿ 12 ವರ್ಷ ಅದಕ್ಕಿಂತಲೂ ಹೆಚ್ಚು ವರ್ಷ ನೆಲೆಸಿದ್ದರೆ, ಪೌರತ್ವ ಪಡೆಯಲು ಅರ್ಹರಾಗಿದ್ದರು. ಆದರೆ, ಹೊಸ ತಿದ್ದುಪಡಿ ಕಾಯ್ದೆಯಲ್ಲಿ ಭಾರತಕ್ಕೆ ಮೇಲಿನ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿದ್ದರೂ ಇಲ್ಲಿ 6 ವರ್ಷ ವಾಸಿದ್ದರೆ ಆರು ಧರ್ಮೀಯರು ಭಾರತದ ಪೌರತ್ವ ಪಡೆಯಲು ಅರ್ಹರಾಗಿರುತ್ತಾರೆ. ಇದರ ಅನುಸಾರ 2014ರ ಡಿ.31ರ ಒಳಗೆ ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ನಿರಾಶ್ರಿತರು ಭಾರತದ ಪೌರತ್ವ ಪಡೆಯಲು ಅರ್ಹರು. 

ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟಿರುವುದು ಅಥವಾ ಧರ್ಮದ ಆಧಾರದ ಮೇಲೆ ಪೌರತ್ವ ನೀಡುತ್ತಿರುವುದು ಈ ತಿದ್ದುಪಡಿ ವಿರೋಧಕ್ಕೆ ಮೊದಲ ಕಾರಣ. ಇದು ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಭಾರತದ ಜಾತ್ಯತೀತ ರಾಷ್ಟ್ರ. ಹಾಗಾಗಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸುತ್ತಿವೆ. 

ಹಾಗೆಯೇ ಕೇಂದ್ರ ಸರ್ಕಾರ ನೆರೆಯ ರಾಷ್ಟ್ರಗಳಿಂದ ಕಿರುಕುಳ ಅನುಭವಿಸಿ ವಲಸೆ ಬಂದ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಪೌರತ್ವ ನೀಡುತ್ತಿದ್ದೇವೆಂದು ಹೇಳುತ್ತಿದೆ. ಆದರೆ, ಈ ತಿದ್ದುಪಡಿ ಮಸೂದೆಯು ಎಲ್ಲಾ ಅಲ್ಪ ಸಂಖ್ಯಾತ ಸಮುದಾಯಗಳನ್ನು ಮತ್ತು ಎಲ್ಲಾ ನೆರೆ ರಾಷ್ಟ್ರಗಳನ್ನು ಒಳಗೊಂಡಿಲ್ಲ. ಪಾಕಿಸ್ತಾನದಲ್ಲಿ ಅಹ್ಮದಿಯೂ ಮತ್ತು ಶಿಯಾ ಮುಸ್ಲಿಂ ಸಮುದಾಯಗಳೂ ತಾರತಮ್ಯವನ್ನು ಅನುಭವಿಸುತ್ತಿವೆ. ಬರ್ಮಾದಲ್ಲಿ ರೊಹಿಂಗ್ಯಾ ಮುಸ್ಲಿಮರು ಮತ್ತು ಹಿಂದೂಗಳು ಕಿರುಕುಳ ಅನುಭವಿಸುತ್ತಿದ್ದಾರೆ. ಶ್ರೀಲಂಕಾದಲ್ಲಿ ಹಿಂದುಗಳು, ಕ್ರಿಶ್ಚಿಯನ್ನರು ಮತ್ತು ತಮಿಳರು ತಾರತಮ್ಯವನ್ನು ಅನುಭವಿಸುತ್ತಿದ್ದಾರೆಂಬುದು ಮತ್ತೊಂದು ಬದಿಯ ವಾದ. 

ಎನ್ಆರ್'ಸಿಗೂ ಪೌರತ್ವ ತಿದ್ದುಪಡಿ ಮಸೂದೆಗೂ ವ್ಯತ್ಯಾಸವೇನು?
ಅಸ್ಸಾಂನಲ್ಲಿ ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದವರ ಪತ್ತೆಯಾಗಿ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್ಆರ್'ಸಿ)ಯನ್ನು ಜಾರಿ ಮಾಡಲಾಗಿತ್ತು. ಆದರ ಪ್ರಕಾರ ಅಲ್ಲಿನ ಜನರು ತಾವು ಅಥವಾ ತಮ್ಮ ಪೂರ್ವಜರು ಅಸ್ಸಾಂ ನಿವಾಸಿಗಳೆಂದು ಸಾಬೀತುಪಡಿಸಬೇಕು. ಈ ಪ್ರಕ್ರಿಯೆ ಪೂರ್ಣಗೊಂಡಿದ್ದು, 19 ಲಕ್ಷ ಜನರನ್ನು ಅಕ್ರಮ ವಲಸಿಗರೆಂದು ಗುರುತಿಸಲಾಗಿದೆ. ಆದರೆ, ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡಲಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com