ನವದೆಹಲಿ: ತೀವ್ರ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇರಳ, ಪಂಜಾಬ್ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಇದೀಗ ಮತ್ತೆರಡು ರಾಜ್ಯಗಳು ಈ ಪಟ್ಟಿಗೆ ಸೇರಿವೆ.
ಹೌದು.. ಮಧ್ಯ ಪ್ರದೇಶ ಮತ್ತು ಛತ್ತೀಸ್ ಘಡದಲ್ಲೂ ವಿವಾದಿತ ಕಾಯ್ದೆಯನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ಆಯಾ ಸರ್ಕಾರಗಳು ಘೋಷಣೆ ಮಾಡಿದ್ದು, ಕಾಯ್ದೆಯನ್ನು ಅಸಂವಿಧಾನಿಕ ಎಂದು ಹೀಗಳೆದಿವೆ.
ಇತ್ತೀಚೆಗಷ್ಟೇ ಕೇರಳ ಸಿಎಂ ಪಿಣರಾಯಿ ವಿಜಯನ್, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಾವು ತಮ್ಮ ರಾಜ್ಯಗಳಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಘೋಷಣೆ ಮಾಡಿದ್ದರು.
ಪೌರತ್ವ ಕೇಂದ್ರದ ವ್ಯಾಪ್ತಿಯಲ್ಲಿ ಬರುತ್ತದೆಯಾದರೂ ಶಾಸನವನ್ನು ಜಾರಿಗೊಳಿಸುವುದಕ್ಕೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸುವಂತಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮಸೂದೆ ಭಾರತದ ಜಾತ್ಯಾತೀತತೆಗೆ ಧಕ್ಕೆ ಉಂಟುಮಾಡುತ್ತದೆ ಆದ್ದರಿಂದ ಇದನ್ನು ರಾಜ್ಯದಲ್ಲಿ ಅನುಮೋದಿಸುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿಗಳು ಹೇಳಿದ್ದರು. ಇದೀಗ ಈ ಪಟ್ಟಿಗೆ ಪಶ್ಚಿಮ ಬಂಗಾಳದೊಂದಿಗೆ ಮಧ್ಯ ಪ್ರದೇಶ, ಛತ್ತೀಸ್ ಗಢ ಕೂಡ ಸೇರ್ಪಡೆಯಾಗಿದ್ದು, ತಾವು ಯಾವುದೇ ಕಾರಣಕ್ಕೂ ತಮ್ಮ ರಾಜ್ಯದಲ್ಲಿ ಸಿಎಬಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿವೆ.
Advertisement