ನವದೆಹಲಿ: ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಜಾರಿಗೆತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ಮಂಗಳವಾರ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈಶಾನ್ಯ ದೆಹಲಿಯ ಸೀಲಾಂಪುರ್ ಪ್ರದೇಶದಲ್ಲಿ ಶಾಲಾ ಬಸ್ ಹಾಗೂ ಸರ್ಕಾರಿ ಆಸ್ತಿ, ಪಾಸ್ತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.
ಸೀಲಾಂಪುರ್ ದಲ್ಲಿ ಇಂದು ಮಧ್ಯಾಹ್ನ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ಸಹ ನಡೆದಿದೆ. ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದು, ಆಶ್ರುವಾಯು ಬಳಸುವ ಮೂಲಕ ಗಲಭೆ ಹತ್ತಿಕಲ್ಲು ಮುಂದಾಗಿದ್ದಾರೆ.
ಪೌರತ್ವ ಕಾಯ್ದೆ ಹಾಗೂ ಎನ್ ಆರ್ ಸಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ಪ್ರತಿಭಟನಾಕಾರರು, ಪೊಲೀಸ್ ಠಾಣೆ ಹಾಗೂ ರಸ್ತೆಯಲ್ಲಿದ್ದ ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಂತಿಯುತವಾಗಿ ನಡೆಸುತ್ತಿದ್ದ ಪ್ರತಿಭಟನೆ ಕೈ ಮೀರಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಸೀಲಾಂಪುರ್ ದ 66 ಫೀಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ ಎಂದು ದೆಹಲಿ ಸಂಚಾರಿ ಪೊಲೀಸರು ಟ್ವೀಟ್ ಮಾಡಿದ್ದಾರೆ.
Advertisement