ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ- ಕಾಂಗ್ರೆಸ್ ಮೈತ್ರಿಗೆ ಸ್ಪಷ್ಟ ಬಹುಮತ ದೊರಕಿದ್ದು, ಜೆಎಂಎಂ ಮುಖ್ಯಸ್ಥ ಹೇಮಂತ್ ಸೋರೆನ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಭರ್ಜರಿ ಸಿದ್ಧತೆ ನಡೆಸಿದ್ದಾರೆ.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜೆಎಂಎಂ ಮುಖ್ಯಸ್ಥ ಹೇಮಂತ್ ಸೋರೆನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ರಾಜ್ಯದ ಸೇವೆ ಮಾಡಲು ಅವರಿಗೆ ಒಳ್ಳೆಯದಾಗಲಿ ಎಂದು ಅವರು ಹಾರೈಸಿ ಟ್ವೀಟ್ ಮಾಡಿದ್ದಾರೆ.
ಅನೇಕ ವರ್ಷಗಳಿಂದ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದ ಜಾರ್ಖಂಡ್ ಜನತೆಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿರುವ ಪ್ರಧಾನಿ, ಪಕ್ಷದ ಕಾರ್ಯಕರ್ತರ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ನಾವು ರಾಜ್ಯದ ಸೇವೆಯನ್ನು ಮುಂದುವರಿಸುತ್ತೇವೆ ಮತ್ತು ಮುಂದಿನ ದಿನಗಳಲ್ಲಿ ಜನ ಕೇಂದ್ರಿತ ಸಮಸ್ಯೆಗಳನ್ನು ಎತ್ತುತ್ತೇವೆ ಎಂದು ಅವರು ಹೇಳಿದ್ದಾರೆ.
ಈ ಮಧ್ಯೆ ರಾಜ್ಯದ ಜನತೆಯನ್ನು ನಿರ್ಲಕ್ಷಿಸಿದ್ದರಿಂದ ಬಿಜೆಪಿಗೆ ಸೂಕ್ತ ಪ್ರತ್ಯುತ್ತರ ನೀಡಿರುವುದಾಗಿ ಪ್ರತಿಪಕ್ಷಗಳು ಮುಖಂಡರು ಹೇಳುತ್ತಿದ್ದಾರೆ.
ಬಿಜೆಪಿ ರಾಜ್ಯವನ್ನು ಹೊರೆ ಎಂದು ಪರಿಗಣಿಸಿತ್ತು. ಡಬಲ್ ಎಂಜಿನ್ ಸರ್ಕಾರದಿಂದ ರಾಜ್ಯದ ಮೇಲೆ ಹೆಚ್ಚಿನ ಹೊರೆ ಹಾಕಲಾಗಿತ್ತು ಎಂದು ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಜೇಶ್ ಠಾಕೂರ್ ಹೇಳಿದ್ದಾರೆ. ಹರ್ಯಾಣದಲ್ಲಿ ಕ್ಷೀಣ, ಮಹಾರಾಷ್ಟ್ರದಲ್ಲಿ ನಿರಾಕರಣೆ, ಜಾರ್ಖಂಡ್ ನಲ್ಲಿ ಸೋಲು. ಇದು 2019ರಲ್ಲಿ ಬಿಜೆಪಿಯ ಕಥೆ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಟ್ವೀಟ್ ಮಾಡಿದ್ದಾರೆ.
Advertisement