ನವದೆಹಲಿ: ಮಮತಾ ಬ್ಯಾನರ್ಜಿ ವರ್ಸಸ್ ಸಿಬಿಐನಿಂದಾಗಿ ಪಶ್ಚಿಮ ಬಂಗಾಳದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.
ಪ್ರತಿಪಕ್ಷಗಳೂ ಮಮತಾ ಬ್ಯಾನರ್ಜಿಗೆ ಬೆಂಬಲ ನೀಡುತ್ತಿವೆ. ಈ ಜನರು ಯಾರು? ಅವರೆಲ್ಲಾ ಜಾಮೀನಿನ ಮೇಲೆ ಹೊರಗಡೆ ಇರುವವರು. ಅಂತಹವರೆಲ್ಲಾ ಮಮತಾ ಬ್ಯಾನರ್ಜಿ ಜೊತೆಗೆ ಕೈ ಜೋಡಿಸಿದ್ದಾರೆ. ಇದು ಮಹಾಘಟಬಂಧನ್ ಅಲ್ಲ, ಭ್ರಷ್ಟಾಚಾರಕ್ಕಾಗಿ ಅವರೆಲ್ಲಾ ಒಂದುಗೂಡಿದ್ದಾರೆ. ಭ್ರಷ್ಟರು ಒಟ್ಟಿಗೆ ನಿಂತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಪಶ್ಚಿಮ ಬಂಗಾಳ ಹಾಗೂ ಕೊಲ್ಕತ್ತಾದಲ್ಲಿ ಏನು ಸಂಭವಿಸಿದೆ ಅದು ಪ್ರಜಾಪ್ರಭುತ್ವ ವ್ಯವಸ್ಥೆ ಹರಣ ಮಾಡಿದಂತಾಗಿದೆ ಎಂದು ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.
ಈ ಮಧ್ಯೆ ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್, ಶರದಾ ಚಿಟ್ ಫಂಡ್ ಪ್ರಕರಣದಲ್ಲಿ ಅನೇಕ ರಾಜಕಾರಣಿಗಳು, ಪ್ರಭಾವಿಗಳು ತೊಡಗಿಸಿಕೊಂಡಿರುವ ಬಗ್ಗೆ ಸಿಬಿಐ ತನಿಖೆಯಿಂದ ತಿಳಿದುಬಂದಿದೆ. ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ, ಅಲ್ಲಿನ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದ್ದು, ಪರಿಸ್ಥಿತಿ ಬಗೆಹರಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.
Advertisement