ದೇಶದ ಇತರ ಭಾಗಗಳಿಗೆ ಸಂಪರ್ಕ ಕೊಂಡಿಯಾಗಿದ್ದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಮಪಾತವಾಗುತ್ತಿರುವುದರಿಂದ ರಸ್ತೆ ಮಾರ್ಗ ಸಂಪೂರ್ಣವಾಗಿ ಬಂದ್ ಆಗಿದ್ದು, ಸಾವಿರಾರು ಜನರು ಜಮ್ಮುವಿನಲ್ಲೇ ಪ್ರಯಾಣಿಸಲು ಸಾಧ್ಯವಾಗದೇ ಸಿಲುಕಿದ್ದರು. ಜಿಲ್ಲಾಡಳಿತ ಹಾಗೂ ಭಾರತೀಯ ವಾಯುಪಡೆ, ರಕ್ಷಣಾ ಕಾರ್ಯಾಚರಣೆಯನ್ನು ಜಂಟಿಯಾಗಿ ಕೈಗೊಂಡಿದ್ದು, ಮೊದಲ ಹಂತದಲ್ಲಿ 301, ಎರಡನೇ ಹಂತದಲ್ಲಿ ವಿದ್ಯಾರ್ಥಿಗಳೂ ಸೇರಿದಂತೆ 406 ಪ್ರಯಾಣಿಕರನ್ನು ಏರ್ ಲಿಫ್ಟ್ ಮಾಡಲಾಗಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ. ಜಮ್ಮು ಮೂಲದ ಟೈಗರ್ ವಿಭಾಗದಿಂದ ಜನರಿಗೆ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡಲಾಗುತ್ತಿದೆ.