ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಶಾರದಾ ಚಿಟ್ ಫಂಡ್ ಹಗರಣದ ಬಗ್ಗೆ ನಡೆಯುತ್ತಿರುವ ಸಿಬಿಐ ತನಿಖೆ ಮೇಲೆ ನಿಗಾವಹಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠ, ಶಾರದಾ ಚಿಟ್ ಫಂಡ್ ನಲ್ಲಿ ಹೂಡಿಕೆ ಮಾಡಿದ ಕೆಲವು ಹೂಡಿಕೆದಾರರು ಸಲ್ಲಿಸಿದ್ದ ಅರ್ಜಿಗಳನ್ನು ತಳ್ಳಿಹಾಕಿದೆ.
ಚಿಟ್ ಫಂಡ್ ಹಗರಣ ಕುರಿತು ತನಿಖೆ ನಡೆಸುವಂತೆ 2013ರಲ್ಲಿಯೇ ಸುಪ್ರೀಂ ಕೋರ್ಟ್ ಸಿಬಿಐಗೆ ಆದೇಶ ನೀಡಿದ್ದರೂ ಕೂಡ ಇನ್ನೂ ತನಿಖೆ ಅಂತ್ಯ ಕಂಡಿಲ್ಲ. ಹೀಗಾಗಿ ಸಿಬಿಐ ತನಿಖೆ ಮೇಲೆ ಸಂಶಯವಿದ್ದು, ನಿಗಾವಹಿಸಬೇಕೆಂದು ಅರ್ಜಿದಾರರು ಮನವಿ ಮಾಡಿಕೊಂಡಿದ್ದರು.
ಆದರೆ ವಿಚಾರಣೆ ನಡೆಸಿದ ನ್ಯಾಯಪೀಠ, ಚಿಟ್ ಫಂಡ್ ಹಗರಣದ ತನಿಖೆ ಮೇಲೆ ನಿಗಾವಹಿಸಲು ಸಮಿತಿ ರಚಿಸಲು ನಾವು ಒಲವು ಹೊಂದಿಲ್ಲ ಎಂದು ಹೇಳಿದೆ.
ಸುಪ್ರೀಂ ಕೋರ್ಟ್ 2013ರಲ್ಲಿ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿತ್ತು.