ಅಸ್ಸಾಂ ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 94ಕ್ಕೆ ಏರಿಕೆ

ಪೂರ್ವ ಅಸ್ಸಾಂನ ಗೊಲ್ಘಾಟ್ ಹಾಗೂ ಜೊರ್ಹಟ್ ನಲ್ಲಿ ಕಳ್ಳಬಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 94ಕ್ಕೇರಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಅಸ್ವಸ್ಥರ ಆರೋಗ್ಯ ವಿಚಾರಿಸುತ್ತಿರುವ ಸಚಿವ ಹಿಮಂತ ಬಿಸ್ವಾ ಶರ್ಮ
ಅಸ್ವಸ್ಥರ ಆರೋಗ್ಯ ವಿಚಾರಿಸುತ್ತಿರುವ ಸಚಿವ ಹಿಮಂತ ಬಿಸ್ವಾ ಶರ್ಮ
ಗುವಾಹಟಿ: ಪೂರ್ವ ಅಸ್ಸಾಂನ ಗೊಲ್ಘಾಟ್ ಹಾಗೂ ಜೊರ್ಹಟ್ ನಲ್ಲಿ ಕಳ್ಳಬಟ್ಟಿ  ಸೇವಿಸಿ ಮೃತಪಟ್ಟವರ ಸಂಖ್ಯೆ 94ಕ್ಕೇರಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಕಳೆದ  ಗುರುವಾರ ರಾತ್ರಿ  ಹಲ್ಮಿರಾ ಟೀ ಎಸ್ಟೇಟ್ ನಲ್ಲಿ ಕಳ್ಳಬಟ್ಟಿ ಸೇವಿಸಿ ಅಸ್ವಸ್ಥರಾಗಿದ್ದ 100ಕ್ಕೂ ಹೆಚ್ಚು ಜನರನ್ನು ಸಮೀಪದ ಸ್ವಾಹಿದ್ ಕುಶಾಲ್ ಕೊನ್ವಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಳ್ಳಬಟ್ಟಿ ಸೇವನೆಯಿಂದ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಅಬಕಾರಿ ಇಲಾಖೆಯ ಅಧಿಕಾರಿಗಳು ನಕಲಿ ಮದ್ಯದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆ ನಂತರ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೊಲ್ಘಾಟ್ ಜಿಲ್ಲೆಯಲ್ಲಿ 60 ಮಂದಿ ಸಾವನ್ನಪ್ಪಿದ್ದು, ಉಳಿದ 34 ಮಂದಿ ಜೊರ್ಹಟ್ ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ. ಎರಡು ಜಿಲ್ಲೆಗಳ ಸುಮಾರು 100 ಮಂದಿ ಜೊರಹತ್  ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ.
ರಾಜ್ಯ ಆರೋಗ್ಯ ಸಚಿವ ಡಾ. ಹಿಮಂತ ಬಿಸ್ವಾ ಶರ್ಮ ಜೆಎಂಸಿ ಹೆಚ್ ಆಸ್ಪತ್ರೆಗೆ ಬೆಳಗ್ಗೆ ಭೇಟಿ ನೀಡಿದ್ದು, ದಿಬ್ರುಗಢ ಹಾಗೂ ತೇಜ್ ಪುರ ವೈದ್ಯಕೀಯ ಕಾಲೇಜುಗಳಿಂದ ಹೆಚ್ಚುವರಿ ವೈದ್ಯರನ್ನು ಕರೆಸಿಕೊಳ್ಳಲಾಗಿದೆ.
ಆಸ್ಪತ್ರೆಯಲ್ಲಿ ದಾಖಲಾದ ಅಸ್ವಸ್ಥರಿಗೆ ಉಚಿತ ಔಷಧಿ ಹಾಗೂ ರೋಗಿಗಳ ಜತೆಗಿರುವ ಸಂಬಂಧಿಕರಿಗೆ ಆಹಾರ  ಪೂರೈಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ನಡುವೆ ಕಳ್ಳ ಬಟ್ಟಿ ದುರಂತಕ್ಕೆ ಸಂಬಂಧಿಸಿದಂತೆ ಜೊರ್ಹಟ್  ನಲ್ಲಿ ಆರು ಮಂದಿ, ಗೊಲ್ಘಾಟ್ ನಲ್ಲಿ ನಾಲ್ವರನ್ನು ಬಂಧಿಸಲಾಗಿದೆ.
ಗೊಲ್ಘಾಟ್  ಜಿಲ್ಲೆಯಲ್ಲಿ  ಕಳ್ಳ ಬಟ್ಟಿ ತಯಾರಿಕೆಗೆ ಬಳಸುತ್ತಿದ್ದ  ಪರಿಕರಗಳನ್ನು ದಾಸ್ತಾನು ಮಾಡಲಾಗಿದ್ದ ಎರಡು ಗೋದಾಮುಗಳನ್ನು  ಪೊಲೀಸರು  ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಪ್ರಕರಣದ ತನಿಖೆ ನಡೆಸುವಂತೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ಅಸ್ಸಾಂ ವಿಭಾಗೀಯ ಆಯುಕ್ತರಿಗೆ ಸೂಚಿಸಿದ್ದು, ಜೊರ್ಹಟ್ ಸಾವಿಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸಲಾಗುತ್ತಿದೆ. ಗೋಲ್ಘಾಟ ಪ್ರಕರಣದಲ್ಲಿ ಪ್ರತ್ಯೇಕ ವಿಭಾಗೀಯ ಅಧಿಕಾರಿ  ತನಿಖೆ ನಡೆಸಲಾಗುತ್ತಿದ್ದು, ಇಬ್ಬರು ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com