ಕೊಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಜಿಲ್ಲೆಯಲ್ಲಿ ಕಳೆದ ರಾತ್ರಿ ತೃಣಮೂಲ ಕಾಂಗ್ರೆಸ್ ನಾಯಕ ಕಾರ್ತಿಕ್ ನಸ್ಕರ್ ಹಾಗೂ ಮತ್ತೋರ್ವ ಆಡಳಿತಾರೂಢ ಪಕ್ಷದ ಕಾರ್ಯಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಕಾರ್ತಿಕ್ ನಾಸ್ಕರ್ ದರಿಯಾ ಪಂಚಾಯತ್ ಮುಖ್ಯಸ್ಥೆ ಸ್ವಪ್ನ ನಾಸ್ಕರ್ ಅವರ ಪತಿಯಾಗಿದ್ದು, ತಂಗ್ರಾಕಲ್ಲಿಯಿಂದ ಬೈಕ್ ನಲ್ಲಿ ಮನೆ ಕಡೆಗೆ ಬರುತ್ತಿದ್ದಾಗ ಅವರನ್ನು ಅಡ್ಡಗಟ್ಟಿದ್ದ ಅಪರಿಚಿತ ದುಷ್ಕರ್ಮಿಗಳು ದಾರಿಯಾಜ್ ಹರಿ ಬಳಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹಲ್ಲೆ ನಡೆಸಿದ್ದಾರೆ.
ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ. ಅವರ ಜೊತೆ ಬೈಕ್ ನಲ್ಲಿದ್ದ ಮತ್ತೋರ್ವ ವ್ಯಕ್ತಿ ಈವರೆಗೂ ಪತ್ತೆಯಾಗಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸುದ್ದಿ ತಿಳಿದು ಪೊಲೀಸ್ ಅಧಿಕಾರಿ ಮಾನಸ್ ಚೌದರಿ ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ, ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದರು. ಟಿಎಂಸಿ ಮುಖಂಡನ ಹತ್ಯೆಗೂ ಮುನ್ನ ಮತ್ತೋರ್ವ ಟಿಎಂಸಿ ಕಾರ್ಯಕರ್ತರೊಬ್ಬರನ್ನು ಸೂರತ್ ಅಲಿ ಮಂಡಲ್ ನಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ವಾರದ ಸಂತೆ ಮನೆಗೆ ವಾಪಾಸ್ಸಾಗುತ್ತಿದ್ದಾಗ ಬೈಕ್ ನಲ್ಲಿ ಬಂದ ನಾಲ್ಕೈದು ಯುವಕರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
Advertisement