ಚಂಡೀಗಢ: ಪಂಜಾಬ್ ಕಾಂಗ್ರೆಸ್ ಶಾಸಕ ಕುಲ್ಜಿತ್ ನಗರ್ ಅವರು ಸೋಮವಾರ ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿರ್ಧಾರದಿಂದ ನನಗೆ ವೈಯಕ್ತಿವಾಗಿ ನೋವಾಗಿದೆ. ಹೀಗಾಗಿ ನಾನು ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ನಗರ್ ತಿಳಿಸಿದ್ದಾರೆ.
ನಿಮ್ಮ ರಾಜೀನಾಮೆ ನಿರ್ಧಾರದಿಂದ ನನಗೆ ನೋವಾಗಿದೆ. ಲೋಕಸಭೆ ಚುನಾವಣೆಯ ಸೋಲಿಗೆ ನೀವು ಒಬ್ಬರೆ ಹೊಣೆಯಲ್ಲ. ಅದು ಸಾಮೂಹಿಕ ಜವಾಬ್ದಾರಿ. ಹೀಗಾಗಿ ನಾನೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ನಗರ್ ಅವರು ರಾಹುಲ್ ಗಾಂಧಿಗೆ ಕಳುಹಿಸಿದ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ ಅವರು ಜುಲೈ 3ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಇದುವರೆಗೂ ಅವರ ರಾಜೀನಾಮೆ ಅಂಗೀಕಾರವಾಗಿಲ್ಲ.