ದೇಶ
ಮಾನನಷ್ಟ ಮೊಕದ್ದಮೆ: ಕೇಜ್ರಿವಾಲ್, ಸಿಸೋಡಿಯಾಗೆ ದೆಹಲಿ ಕೋರ್ಟ್ ಜಾಮೀನು
ಭಾರತೀಯ ಜನತಾ ಪಾರ್ಟಿ ನಾಯಕ ವಿಜೇಂದರ್ ಗುಪ್ತಾ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ...
ನವದೆಹಲಿ: ಭಾರತೀಯ ಜನತಾ ಪಾರ್ಟಿ ನಾಯಕ ವಿಜೇಂದರ್ ಗುಪ್ತಾ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಮಂಗಳವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಿದೆ.
ತಮ್ಮನ್ನು ಹತ್ಯೆ ಮಾಡಲು ಯತ್ನಿಸಿದ್ದರು ಎಂದು ತಮ್ಮ ಮೇಲೆ ಅರವಿಂದ್ ಕೇಜ್ರಿವಾಲ್ ಆರೋಪ ಮಾಡುವ ಮೂಲಕ ನನ್ನ ವ್ಯಕ್ತಿತ್ವಕ್ಕೆ ಧಕ್ಕೆಯನ್ನುಂಟುಮಾಡಿದ್ದಾರೆ ಎಂದು ಗುಪ್ತ ಆರೋಪಿಸಿದ್ದರು.
ವಾದ-ವಿವಾದ ಆಲಿಸಿದ ದೆಹಲಿಯ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ 10 ಸಾವಿರ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿ ಮೇಲೆ ಮುಖ್ಯಮಂತ್ರಿಗಳಿಗೆ ಜಾಮೀನು ಮಂಜೂರು ಮಾಡಿದರು.
ದೆಹಲಿ ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿರುವ ವಿಜೇಂದರ್ ಗುಪ್ತಾ ತಮ್ಮ ದೂರಿನಲ್ಲಿ, ಆಮ್ ಆದ್ಮಿ ಪಕ್ಷದ ಈ ಇಬ್ಬರು ನಾಯಕರ ಹೇಳಿಕೆಗಳ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವ ವರದಿಗಳು ಮತ್ತು ಟ್ವೀಟ್ ಗಳು ವ್ಯಾಪಕವಾಗಿ ಹರಿದಾಡುತ್ತಿದ್ದು ಇವುಗಳಿಂದಾಗಿ ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯುಂಟಾಗಿದೆ, ಈ ಘಟನೆ ಬಳಿಕ ಅರವಿಂದ ಕೇಜ್ರಿವಾಲ್ ಆಗಲಿ ಮನೀಶ್ ಸಿಸೋಡಿಯಾ ಆಗಲಿ ತಮ್ಮಲ್ಲಿ ಕ್ಷಮೆ ಕೇಳುವುದಾಗಿ ವಿಷಾದ ವ್ಯಕ್ತಪಡಿಸುವುದಾಗಲಿ ಮಾಡಿಲ್ಲ ಎಂದು ತಿಳಿಸಿದ್ದರು.