ಪೊಲೀಸರಿಗೆ ಶರಣಾಗಿದ್ದ ಶರವಣ ಭವನ್ ಮಾಲೀಕ ಪಿ ರಾಜಗೋಪಾಲ್ ಆಸ್ಪತ್ರೆಯಲ್ಲಿ ಸಾವು

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಇತ್ತೀಚೆಗಷ್ಟೇ ಪೊಲೀಸರಿಗೆ ಶರಣಾಗಿದ್ದ ಖ್ಯಾತ ಶರವಣ ಭವನ ಹೋಟೆಲ್ ಸಮೂಹದ ಮಾಲೀಕ ಪಿ.ರಾಜಗೋಪಾಲ್‌ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಚೆನ್ನೈ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಇತ್ತೀಚೆಗಷ್ಟೇ ಪೊಲೀಸರಿಗೆ ಶರಣಾಗಿದ್ದ ಖ್ಯಾತ ಶರವಣ ಭವನ ಹೋಟೆಲ್ ಸಮೂಹದ ಮಾಲೀಕ ಪಿ.ರಾಜಗೋಪಾಲ್‌ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಕಳೆದವಾರ ಶರಣಾಗಿದ್ದ ಪಿ ರಾಜಗೋಪಾಲ್ ಅವರನ್ನು ಅನಾರೋಗ್ಯದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಕೆಲ ಮಾಧ್ಯಮಗಳು ವರದಿ ಮಾಡಿವೆ.
ತನ್ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ನೌಕರನ ಹೆಂಡತಿಯನ್ನು ಮದುವೆಯಾಗುವ ದುರುದ್ದೇಶದಿಂದ 2001ರ ಅಕ್ಟೋಬರ್‌ನಲ್ಲಿ ನೌಕರನನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪ ಪಿ.ರಾಜಗೋಪಾಲ್‌ ಮೇಲಿತ್ತು. ಆ ಪ್ರಕರಣದಲ್ಲಿ ರಾಜಗೋಪಾಲ್ ಅಪರಾಧಿ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜಗೋಪಾಲ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮದ್ರಾಸ್ ಹೈಕೋರ್ಟ್‌ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದು, ಜುಲೈ 7ರ ಒಳಗೆ ಶರಣಾಗಬೇಕು ಎಂದು ಸೂಚಿಸಿತ್ತು.
ಅಂತೆಯೇ ರಾಜಗೋಪಾಲ್ ಅವರು ನ್ಯಾಯಾಲಯಕ್ಕೆ ಶರಣಾಗಲು ಹೆಚ್ಚಿನ ಕಾಲಾವಕಾಶ ನೀಡಲು ಸುಪ್ರೀಂಕೋರ್ಟ್ ಈ ಹಿಂದೆ ನಿರಾಕರಿಸಿತ್ತು. ಎನ್ ವಿ ರಾಮಣ್ಣ  ನೇತೃತ್ವದ ಪೀಠ  ಶರವಣ ಭವನ ಮಾಲಿಕ  ರಾಜಗೋಪಾಲ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕಿರಿಸಿದ್ದರು, 2001 ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷಗೆ ಗುರಿಯಾಗಿರುವ ರಾಜಾ ಗೋಪಾಲ್ ಜುಲೈ 7 ರಂದು ಕೋರ್ಟ್ ಗೆ ಶರಣಾಗಬೇಕಿತ್ತು  ಆದರೆ ಆತ ಶರಣಾಗಿರಲಿಲ್ಲ. ಕಳೆದ ಕೆಲವು ದಿನಗಳಿಂದ ಇಲ್ಲಿನ ಅಶೋಕನಗರದ ಮನೆಯಲ್ಲಿ ವಾಸವಿದ್ದ ರಾಜಗೋಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com