ಪ್ರಸ್ತುತ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಇಡುಕ್ಕಿ, ಪಥನಂತಿಟ್ಟ, ಎರ್ನಾಕುಲಂ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿನ ತಗ್ಗು ಪ್ರದೇಶ ಮತ್ತು ನದಿ ತೀರದಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಈಗಾಗಲೇ ಈ ಭಾಗದಲ್ಲಿ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದು, ಸುರಕ್ಷಿತ ಪ್ರದೇಶಗಳಿಗೆ ರವಾನೆಯಾಗುವಂತೆ ಸೂಚನೆ ನೀಡಿದ್ದಾರೆ. ಈ ನಾಲ್ಕು ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಬರೊಬ್ಬರಿ 20 ಸೆ.ಮೀ ಮಳೆಯಾಗುತ್ತಿದ್ದು, ಇಲ್ಲಿನ ಜಲಾಶಯಗಳಲ್ಲಿನ ನೀರಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಮೀನುಗಾರರು ನದಿಗೆ ಮತ್ತು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.