ಅಜಂಖಾನ್ ಹೇಳಿಕೆ: ವಿವಿಧ ಪಕ್ಷಗಳ ಮುಖಂಡರೊಂದಿಗೆ ಸಮಾಲೋಚಿಸಿ ಕ್ರಮ- ಸ್ಪೀಕರ್
ಸಮಾಜವಾದಿ ಪಕ್ಷದ ಸಂಸದ ಅಜಂಖಾನ್ ಬಿಜೆಪಿ ಸಂಸದೆ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಗೆ ವಿವಿಧ ಪಕ್ಷಗಳಿಂದ ಖಂಡನೆ ವ್ಯಕ್ತವಾಗಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಸಂಸದರು ಸ್ವೀಕರ್ ಓಂ ಬಿರ್ಲಾ ಅವರನ್ನು ಒತ್ತಾಯಿಸಿದ್ದಾರೆ
ನವದೆಹಲಿ: ಸಮಾಜವಾದಿ ಪಕ್ಷದ ಸಂಸದ ಅಜಂಖಾನ್ ಬಿಜೆಪಿ ಸಂಸದೆ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಗೆ ವಿವಿಧ ಪಕ್ಷಗಳಿಂದ ಖಂಡನೆ ವ್ಯಕ್ತವಾಗಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಸಂಸದರು ಸ್ವೀಕರ್ ಓಂ ಬಿರ್ಲಾ ಅವರನ್ನು ಒತ್ತಾಯಿಸಿದ್ದಾರೆ.
ಬಿಜೆಪಿ ಸಂಸದರ ಬೇಡಿಕೆಗೆ ಸ್ಪಂದಿಸಿರುವ ಓಂ ಬಿರ್ಲಾ, ವಿವಿಧ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಿ , ಸದ್ಯದಲ್ಲೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ನಿನ್ನೆ ತ್ರಿವಳಿ ತಲಾಖ್ ಮಸೂದೆ ಮೇಲಿನ ಚರ್ಚೆ ನಡೆಯುತ್ತಿರುವಾಗ ಸಭಾಪತಿ ಪೀಠದಲ್ಲಿದ್ದ ಬಿಜೆಪಿ ಸಂಸದೆ ರಮಾದೇವಿ ಅವರನ್ನು ಕುರಿತು ಅಜಂಖಾನ್, ನಿಮ್ಮನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಬೇಕು ಎನ್ನುವ ಬಯಕೆ ಉಂಟಾಗುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸಂಸದ ಸಂಘಮಿತ್ರ ಮೌರ್ಯ, ಸಮಾಜವಾದಿ ಸದಸ್ಯರು ನೀಡಿರುವ ಹೇಳಿಕೆ ನಾಚಿಕೆಗೇಡಿತನದಾಗಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಪೀಕರ್ ಅವರನ್ನು ಒತ್ತಾಯಿಸಿದರು.
ಅಜಂಖಾನ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಎಐಎಂಐಎಂ ಸಂಸದ ಅಕ್ಬರುದ್ದೀನ್ ಓವೈಸಿ ಸೇರಿದಂತೆ ಹಲವು ಸಂಸದರು ಎಸ್ಪಿ ಸಂಸದನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಪೀಕರ್ ಅವರನ್ನು ಕೋರಿದರು.