ಲಖಿಂಪುರ್ ಕೇರಿ: ಉತ್ತರ ಪ್ರದೇಶದ ಲಿಖಿಂಪುರ್ ಕೇರಿಯ ಗೋಲ ಪ್ರದೇಶದಲ್ಲಿರುವ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಪ್ರತಿಮೆಗೆ ದುಷ್ಕರ್ಮಿಗಳು ಬುರ್ಖಾ ಹಾಕಿದ ಘಟನೆ ಸೋಮವಾರ ನಡೆದಿದೆ.
ದುಷ್ಕರ್ಮಿಗಳ ಈ ಕೃತ್ಯದಿಂದ ಆಕ್ರೋಶಗೊಂಡ ಕಾಂಗ್ರೆಸ್ ನಾಯಕರು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಿ, ಪ್ರಕರಣದ ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿಗಳು ಆಗಮಿಸಿದ್ದು, ಪ್ರತಿಮೆಗೆ ಹಾಕಿದ್ದ ಬುರ್ಖಾ ತೆಗೆದು, ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಶಾಂತಿ ಕದಡುವ ಉದ್ದೇಶದಿಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಆದರೆ ನಾವು ಶೀಘ್ರದಲ್ಲೇ ಆರೋಪಿಗಳನ್ನು ಗುರುತಿಸಿ, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.