ನವದೆಹಲಿ: 17 ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಹಂಗಾಮಿ ಸ್ಪೀಕರ್ ವೀರೇಂದ್ರ ಕುಮಾರ್ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಿದರು. ನಿಯಮಗಳ ಪ್ರಕಾರ ಲೋಕಸಭೆಯ ನಾಯಕಾರದ ಮೋದಿ ಮೊದಲಿಗೆ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಸಚಿವರು ಹಾಗೂ ಇನ್ನಿತರ ಸಂಸದರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಎರಡು ದಿನ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರವಿಶಂಕರ್ ಪ್ರಸಾದ್, ಸ್ಮೃತಿ ಇರಾನಿ ಮತಿತ್ತರರು ಪ್ರಮಾಣ ವಚನ ಸ್ವೀಕರಿಸಿದರು.
ಜೂನ್ 19 ರಂದು ಲೋಕಸಭೆಯ ಸ್ಪೀಕರ್ ಚುನಾವಣೆ ನಡೆಯಲಿದೆ. ಜೂನ್ 20 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.
ಜುಲೈ 5 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೂತನ ಸರ್ಕಾರದ ಬಜೆಟ್ ಮಂಡಿಸಲಿದ್ದಾರೆ.