ಪ್ರತ್ಯೇಕ ರಾಜ್ಯಸಭೆ ಚುನಾವಣೆ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ರಾಜ್ಯಸಭೆಯ ಎರಡು ಸ್ಥಾನಗಳಿಗೆ ಗುಜರಾತ್ ನಿಂದ ನಡೆಯಲಿರುವ ಚುನಾವಣೆಯನ್ನು ಪ್ರತ್ಯೇಕವಾಗಿ ನಡೆಸುವ ಚುನಾವಣಾ ಆಯೋಗದ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ರಾಜ್ಯಸಭೆಯ ಎರಡು ಸ್ಥಾನಗಳಿಗೆ ಗುಜರಾತ್ ನಿಂದ ನಡೆಯಲಿರುವ ಚುನಾವಣೆಯನ್ನು ಪ್ರತ್ಯೇಕವಾಗಿ ನಡೆಸುವ ಚುನಾವಣಾ ಆಯೋಗದ ತೀರ್ಮಾನವನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಈ ಹಿಂದೆ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಗುಜರಾತ್‌ ನಿಂದ ನಡೆಯಲಿರುವ ಚುನಾವಣೆಯನ್ನು ಪ್ರತ್ಯೇಕವಾಗಿ ನಡೆಸುವ ಚುನಾವಣಾ ಆಯೋಗದ ತೀರ್ಮಾನವನ್ನು ಪ್ರಶ್ನಿಸಿ, ಕಾಂಗ್ರೆಸ್‌ನ ಗುಜರಾತ್‌ ಘಟಕವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಗೃಹ ಸಚಿವ ಅಮಿತ್ ಶಾ ಮತ್ತು ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಗೆ ಆಯ್ಕೆಯಾಗಿದ್ದರಿಂದ ಈ ಸ್ಥಾನಗಳು ತೆರವಾಗಿದ್ದು, ಈ ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿತ್ತು.
ಆಯೋಗದ ಕ್ರಮವನ್ನು ಪ್ರಶ್ನಿಸಿದ್ದ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಅಮಿತ್‌ ಚಾವ್ಡಾ ಅವರು, ‘ಆಯೋಗದ ಅಧಿಸೂಚನೆ ಅಸಾಂವಿಧಾನಿಕ. ಪ್ರತಿ ಸ್ಥಾನಕ್ಕೂ ಪ್ರತ್ಯೇಕ ಚುನಾವಣೆ ನಡೆಸಿದರೆ ಕಾಂಗ್ರೆಸ್‌ ಪಕ್ಷ ಒಂದು ಸ್ಥಾನ ಗೆಲ್ಲುವ ಅವಕಾಶ ಕಳೆದುಕೊಳ್ಳಲಿದೆ’ ಎಂದು ಹೇಳಿದ್ದರು. ಈ ಸಂಬಂಧ ಗುಜರಾತ್ ವಿಪಕ್ಷ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪರೇಶ್ ಭಾಯ್ ಧನನಿ ಮೂಲಕ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಕೂಡ ಸಲ್ಲಿಕೆ ಮಾಡಿದ್ದರು. 
ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಂವಿಧಾನದ ಕಲಂ 32ರ ಅನ್ವಯ ಕಾಂಗ್ರೆಸ್ ಪಕ್ಷ ಈ ವಿವಾದವನ್ನು ಚುನಾವಣಾ ಆಯೋಗದಲ್ಲೇ ಬಗೆಹರಿಸಿಕೊಳ್ಳಬೇಕು. ಸರ್ವೋಚ್ಛ ನ್ಯಾಯಾಲಯದವರೆಗೂ ಈ ಬಗ್ಗೆ ಅರ್ಜಿ ದಾಖಲಿಸುವಂತಿಲ್ಲ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com