ಇನ್ನು ಪುಲ್ವಾಮ ಉಗ್ರದಾಳಿ ನಡೆದ ಫೆಬ್ರವರಿ 14ರಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಉನ್ನತ ಮಟ್ಟದ ಸಭೆಯಲ್ಲಿ ವಾಯುಸೇನೆ ಮುಖ್ಯಸ್ಥ ಬಿಎಸ್ ಧನೋವಾ ಅವರು, ಉಗ್ರ ದಾಳಿ ವಿರುದ್ಧ ಈ ಬಾರಿ ತಾವು ಕಾರ್ಯಾಚರಣೆ ನಡೆಸುತ್ತೇವೆ ಎಂದು ಹೇಳಿದ್ದರು. ಇದಕ್ಕೆ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರೀಯ ರಕ್ಷಣಾ ಸಲಹೆಗಾರ ಅಜಿತ್ ಧೋವಲ್ ಸಮ್ಮತಿ ಕೂಡ ನೀಡಿದ್ದರು. ಇದೇ ಕಾರಣಕ್ಕಾಗಿಯೇ ಫೆಬ್ರವರಿ 16ರಿಂದಲೇ ವಾಯುಶಕ್ತಿ ವೈಮಾನಿಕ ಪ್ರದರ್ಶನಕ್ಕೆ ಸಭೆಯಲ್ಲಿ ಅನುಮೋದನೆ ಕೂಡ ನೀಡಲಾಗಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.