ನವದೆಹಲಿ: ಬಿಜೆಪಿ ಆಮ್ ಆದ್ಮಿ ಪಕ್ಷದ ಏಳಕ್ಕೂ ಹೆಚ್ಚು ಶಾಸಕರನ್ನು ಸಂಪರ್ಕಿಸಿದ್ದು, ಕೇಸರಿ ಪಕ್ಷ ಸೇರಿದರೆ ತಲಾ 10 ಕೋಟಿ ರುಪಾಯಿ ನೀಡುವುದಾಗಿ ಆಮಿಷ ಒಡ್ಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಪಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಏಳು ಆಪ್ ಶಾಸಕರು ನನ್ನನ್ನು ಭೇಟಿ ಮಾಡಿದ್ದು, ಬಿಜೆಪಿ ಅವರನ್ನು ಸಂಪರ್ಕಿಸಿ, ತಲಾ 10 ಕೋಟಿ ರುಪಾಯಿ ನೀಡುವುದಾಗಿ ಆಮಿಷ ಒಡ್ಡಿರುವುದಾಗಿ ತಿಳಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಬಿಜೆಪಿಯವರು ನಮ್ಮ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರು ಸೂಟ್ ಆಗುವುದಿಲ್ಲ. ಪ್ರಧಾನಿ ಮೋದಿ ಎರಡು ದಿನಗಳ ಹಿಂದಷ್ಟೇ 40 ಟಿಎಂಸಿ ಶಾಸಕರನ್ನು ಖರೀದಿಸಿ ಮಮತಾ ಬ್ಯಾನರ್ಜಿ ಸರ್ಕಾರ ಬೀಳಿಸುವುದಾಗಿ ಹೇಳಿದ್ದರು ಎಂದರು.
ಕಳೆದ ಸೋಮವಾರ ಪಶ್ಚಿಮ ಬಂಗಾಳದ ಸೆರಾಂಪೊರೆಯಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, 40 ಟಿಎಂಸಿ ಶಾಸಕರ ನನ್ನ ಸಂಪರ್ಕದಲ್ಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಉಳಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದಿದ್ದರು.