ಕಳೆದ ಬಾರಿ ಮುಂಗಾರು ಅವಧಿಯಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗಿತ್ತು. ಮಡಿಕೇರಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಭೂ ಕುಸಿತ ಸಂಭವಿಸಿತ್ತು. ಒಟ್ಟಾರೆ ಸುಮಾರು 900 ಟಿಎಂಸಿ. ನೀರು ವ್ಯರ್ಥವಾಗಿ ಸಮುದ್ರಕ್ಕೆ ಹರಿದು ಹೋಗಿತ್ತು. ಮುನ್ನೆಚ್ಚರಿಕೆ ವಹಿಸಿ ಈ ಪೈಕಿ ಕನಿಷ್ಠ 100 ಟಿಎಂಸಿ ನೀರನ್ನು ಕೆರೆ ತುಂಬಿಸಲು ಬಳಸಿಕೊಂಡಿದ್ದರೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುತ್ತಿತ್ತು. ಈ ಬಾರಿಯೂ ಸಹ ಮುಂಗಾರು ಮಳೆಯ ಸಂದರ್ಭದಲ್ಲಿ ಎದುರಾಗಲಿರುವ ವಿಪತ್ತು ನಿಭಾಯಿಸಲು ರಾಜ್ಯ ಸರ್ಕಾರ ಗೃಹ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಸಮಿತಿ ಈಗಾಗಲೇ ಕೊಡಗು ಮತ್ತು ಮಲೆನಾಡು ಭಾಗದ ಜಿಲ್ಲೆಗಳಿಗೆ ಮಳೆ ಹಾನಿ ಸಂಭವಿಸಿದರೆ ಪರಿಸ್ಥಿತಿ ಎದುರಿಸಲು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿ, ವಿಪತ್ತು ನಿರ್ವಹಣಾ ತಂಡಗಳನ್ನು ಸಜ್ಜಗೊಳಿಸಿದೆ.