ನವದೆಹಲಿ: ಲೋಕಸಭಾ ಚುನಾವಣೆ ಸೋಲಿನಿಂದ ಕಂಗೆಟ್ಟು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದರು ಎಂಬ ಸುದ್ದಿಯನ್ನು ಕಾಂಗ್ರೆಸ್ ಅಲ್ಲಗಳೆದಿದೆ.
ಮೇ.25 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡುವ ಪ್ರಸ್ತಾವನೆ ಮುಂದಿಟ್ಟಿದ್ದರು ಎಂಬ ಬಗ್ಗೆ ಎಎನ್ಐ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ಈ ಬೆನ್ನಲ್ಲೇ ಕಾಂಗ್ರೆಸ್ ಸ್ಪಷ್ಟನೆ ನೀಡಿದ್ದು, ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿದ್ದ ಸುದ್ದಿ ನಿಜವಲ್ಲ ಎಂದು ಹೇಳಿದೆ.
ಸಿಡಬ್ಲ್ಯುಸಿ ಸಭೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕ ಗಾಂಧಿ ವಾದ್ರ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಚತ್ತೀಸ್ ಗಢ, ಪಾಂಡಿಚರಿಯ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.
ಲೋಕಸಭಾ ಚುನಾವಣೆಯ ಸೋಲಿನ ಕಾರಣಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.