ನವದೆಹಲಿ: 60 ವರ್ಷಗಳಿಗೂ ಹೆಚ್ಚು ವಿವಾದದಲ್ಲಿರುವ ಅಯೋಧ್ಯೆ ವಿವಾದಕ್ಕೆ ಸುಪ್ರೀಂಕೋರ್ಟ್ ಶನಿವಾಕ ತಾರ್ಕಿಕ ಅಂತ್ಯ ಹಾಡಲಿದ್ದು, ತೀರ್ಪು ಹಿನ್ನೆಲೆಯಲ್ಲಿ ಉತ್ತರಪ್ರದೇಶ, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ ಹಾಗೂ ದೆಹಲಿ ರಾಜ್ಯಗಳಲ್ಲಿ ಶಾಲಾ ಕಾಲೇಜುಗಳು ಮತ್ತು ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಕೇವಲ ಸರ್ಕಾರಿ ಶಾಲೆಗಳಷ್ಟೇ ಅಲ್ಲದೆ, ಖಾಸಗಿಯ ಎಲ್ಲಾ ಶಾಲಾ, ಕಾಲೇಜುಗಳನ್ನು ಬಂದ್ ಮಾಡುವಂತೆ ಆಯಾ ರಾಜ್ಯ ಸರ್ಕಾರಗಳು ಆದೇಶ ಹೊರಡಿಸಿವೆ.
ತೀರ್ಪು ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಮಧ್ಯಪ್ರದೇಶ, ಉತ್ತರಪ್ರದೇಶ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ ಹಾಗೂ ದೆಹಲಿ ಸರ್ಕಾರಗಳು ಸೆಕ್ಷನ್ 144 ಜಾರಿ ಗೊಳಿಸಿವೆ.
ಸೆಕ್ಷನ್ 144 ಜಾರಿ ಹಿನ್ನೆಲೆಯಲ್ಲಿ ನಾಲ್ಕು ಜನಕ್ಕಿಂತಲೂ ಹೆಚ್ಚು ಮಂದಿ ಗುಂಪುಗೂಡಬಾರದು. ಇನ್ನು ಮಧ್ಯಪ್ರದೇಶದ ಭೂಪಾಲ್ ಹಾಗೂ ಬೆಂಗಳೂರು ನಗರದಲ್ಲಿ ಸೆಕ್ಷನ್ 144 ಜಾರಿಯಾಗಿದ್ದು, ಇಂದು ಬೆಳಿಗ್ಗೆ 7 ಗಂಟೆಯಿಂದ ಮಧ್ಯರಾತ್ರಿ 12ಗಂಟೆವರೆಗೂ ಬೆಂಗಳೂರು ನಗರದಲ್ಲಿ ಸೆಕ್ಷನ್ 144 ಜಾರಿಯಲ್ಲಿರಲಿದೆ ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಆಡಳಿತ ಮಂಡಳಿ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದ್ದು, ಶನಿವಾರವನ್ನು ಡ್ರೈಡೇ ಎಂದು ಘೋಷಿಸಿದೆ. ಡ್ರೈ ಡೇ ಎಂದರೆ ಮದ್ಯ ಮರಾಟಕ್ಕೆ ನಿಷೇಧ ಹೇರಲಾಗಿದೆ.
Advertisement