ಮುಂಬೈ: ಮಹಾರಾಷ್ಟ್ರದ ಸರ್ಕಾರ ರಚನೆ ಪ್ರಹಸನ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಸರ್ಕಾರ ರಚನೆಗೆ ಶಿವಸೇನೆಯ ಹಾದಿ ಇನ್ನೇನು ಸುಗಮವಾಗೇಬಿಡ್ತು ಎನ್ನುವಷ್ಟರಲ್ಲಿ ಮತ್ತೊಂದು ಮಹಾ ತಿರುವು ದೊರೆತಿದೆ.
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಶಿವಸೇನೆ ಸರ್ಕಾರ ರಚನೆಗೆ ಹಕ್ಕು ಮಂಡಿಸಬೇಕಿತ್ತು. ಆದರೆ ಸಂಜೆ ವೇಳೆಗೆ ಎನ್ ಸಿಪಿ ಜೊತೆ ಚರ್ಚೆ ನಡೆಸಿದ್ದ ಕಾಂಗ್ರೆಸ್ ಪಕ್ಷ ಕೊನೆ ಕ್ಷಣದಲ್ಲಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದೆ.
ಶಿವಸೇನೆಗೆ ಬೆಂಬಲ ನೀಡಲು ಕಾಂಗ್ರೆಸ್ ಸಂಪೂರ್ಣವಾಗಿ ಸಜ್ಜುಗೊಂಡಂತಿಲ್ಲ ಎಂಬ ಸಂದೇಶ ರವಾನೆಯಾಗುವಂತಹ ಬೆಳವಣಿಗೆಯಲ್ಲಿ, ಶಿವಸೇನೆಗೆ ಬೆಂಬಲ ನೀಡುವ ಸಂಬಂಧ ಕಾಂಗ್ರೆಸ್ ಪಕ್ಷ ಎನ್ ಸಿಪಿ ಪಕ್ಷದೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸುವುದಾಗಿ ಹೇಳಿದೆ.
ಕಾಂಗ್ರೆಸ್ ಪಕ್ಷ ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಮಹಾರಾಷ್ಟ್ರ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದ್ದೇವೆ. ಕಾಂಗ್ರೆಸ್ ಅಧ್ಯಕ್ಷರು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರೊಂದಿಗೂ ಚರ್ಚೆ ನಡೆಸಿದ್ದಾರೆ. ಎನ್ ಸಿಪಿಯೊಂದಿಗೆ ಕಾಂಗ್ರೆಸ್ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದೆ ಎಂದು ಹೇಳಿದೆ.
Advertisement