ಸಂಸತ್‌ ಜಂಟಿ ಅಧಿವೇಶನ ಬಹಿಷ್ಕರಿಸಲು ಕಾಂಗ್ರೆಸ್ ಸೇರಿ ಎಲ್ಲಾ ವಿರೋಧ ಪಕ್ಷಗಳ ನಿರ್ಧಾರ

ಮಹಾರಾಷ್ಟ್ರದಲ್ಲಿ ಸಂವಿಧಾನದ ಮೌಲ್ಯಗಳನ್ನು ಉಲ್ಲಂಘಿಸಿರುವುದನ್ನು ವಿರೋಧಿಸಿ ಮಂಗಳವಾರ ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಏರ್ಪಡಿಸಿರುವ ಸಂವಿಧಾನ ದಿನ ಕಾರ್ಯಕ್ರಮವನ್ನು ಬಹಿಷ್ಕರಿಸಲು ಕಾಂಗ್ರೆಸ್...
ಸಂಸತ್ ಭವನ(ಸಂಗ್ರಹ ಚಿತ್ರ)
ಸಂಸತ್ ಭವನ(ಸಂಗ್ರಹ ಚಿತ್ರ)

ನವದೆಹಲಿ: ಮಹಾರಾಷ್ಟ್ರದಲ್ಲಿ ಸಂವಿಧಾನದ ಮೌಲ್ಯಗಳನ್ನು ಉಲ್ಲಂಘಿಸಿರುವುದನ್ನು ವಿರೋಧಿಸಿ ಮಂಗಳವಾರ ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಏರ್ಪಡಿಸಿರುವ ಸಂವಿಧಾನ ದಿನ ಕಾರ್ಯಕ್ರಮವನ್ನು ಬಹಿಷ್ಕರಿಸಲು ಕಾಂಗ್ರೆಸ್ ಮತ್ತು ಇತರೆ ಎಲ್ಲಾ ವಿರೋಧ ಪಕ್ಷಗಳು ಸೋಮವಾರ ನಿರ್ಧರಿಸಿವೆ.

ಸಂವಿಧಾನದ ದಿನದ ಅಂಗವಾಗಿ ಸಂಸತ್‌ನ ಸೆಂಟ್ರಲ್ ಹಾಲ್‌ನಲ್ಲಿ ಏರ್ಪಡಿಸಿರುವ ಸಂಸತ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.

ಈ ವೇಳೆ ಸಂಸತ್‌ನ ಅಂಬೇಡ್ಕರ್ ಪ್ರತಿಮೆ ಬಳಿ ಕಾಂಗ್ರೆಸ್ ಹಾಗೂ ಇತರೆ ಪ್ರತಿಪಕ್ಷಗಳು ನಾಳೆ ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಪ್ರತಿಭಟನೆ ನಡೆಸಲಿವೆ.

ಜಂಟಿ ಅಧಿವೇಶನ ಬಹಿಷ್ಕರಿಸುವ ಪ್ರತಿಪಕ್ಷಗಳ ನಿರ್ಧಾರವನ್ನು ಬಿಜೆಪಿ ಖಂಡಿಸಿದ್ದು, '70ನೇ ಸಂವಿಧಾನದ ದಿನದಂದೇ(ನ.26) ಜಂಟಿ ಸದನವನ್ನು ಬಹಿಷ್ಕರಿಸಲು ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧಪಕ್ಷಗಳು ತೀರ್ಮಾನಿಸಿವೆ. ಇದು ಈ ಪಕ್ಷಗಳಿಂದ ಅಂಬೇಡ್ಕರ್ ಮತ್ತು ಸಂವಿಧಾನಕ್ಕೆ ಉಂಟಾಗುತ್ತಿರುವ ಮತ್ತೊಂದು ಅವಮಾನ' ಎಂದು ಹೇಳಿದೆ.

ಇಂದು ಸಹ ಮಹಾರಾಷ್ಟ್ರದಲ್ಲಿ ಬಿಜೆಪಿ ಅಕ್ರಮವಾಗಿ ಅಧಿಕಾರಕ್ಕೆ ಬಂದಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಾಂಗ್ರೆಸ್ ಸಂಸತ್ ಎದುರು ಪ್ರತಿಭಟನೆ ನಡೆಸಿತ್ತು, ಬಳಿಕ ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲಿಯೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಸಂಸದರು ಘೋಷಣೆಗಳನ್ನು ಕೂಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com