ಇಸ್ಲಾಮಾಬಾದ್: ಗುರು ನಾನಕ್ ಅವರ 550ನೇ ಜನ್ಮದಿನದ ಅಂಗವಾಗಿ ನಿರ್ಮಾಣವಾಗುತ್ತಿರುವ ಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಅಧಿಕೃತ ಆಹ್ವಾನ ನೀಡಿದ್ದಾರೆ ಎಂದು ಗುರುವಾರ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಇದಕ್ಕು ಮುನ್ನ, ನವೆಂಬರ್ 9 ರಂದು ಆಯೋಜಿನೆಯಾಗಿರುವ ಕರ್ತಾರ್ಪುರ ಕಾರಿಡಾರ್ ಉದ್ಘಾಟನೆ ಕಾರ್ಯಕ್ರಮಕ್ಕೆ ಪಾಕಿಸ್ತಾನ ಆಹ್ವಾನ ನೀಡಿರುವ ಬಗ್ಗೆ ನಮಗೆ ಇದುವರೆಗೂ ಯಾವುದೇ ಮಾಹಿತಿ ಇಲ್ಲ ಎಂದು ಮಾಜಿ ಪ್ರಧಾನಿಯ ಕಚೇರಿ ತಿಳಿಸಿತ್ತು ಮತ್ತು ಮೂಲಗಳ ಪ್ರಕಾರ ಮನಮೋಹನ್ ಸಿಂಗ್ ಅವರು ಪಾಕ್ ಆಹ್ವಾನವನ್ನು ತಿರಸ್ಕರಿಸಲಿದ್ದಾರೆ ಎನ್ನಲಾಗಿದೆ.
"ಕರ್ತಾರ್ಪುರ ಕಾರಿಡಾರ್ನ ಉದ್ಘಾಟನಾ ಕಾರ್ಯಕ್ಕಾಗಿ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನಾವು ಆಹ್ವಾನವನ್ನು ನೀಡಲು ಬಯಸುತ್ತೇವೆ. ಅವರು ಸಿಖ್ಖ್ ಸಮುದಾಯವನ್ನು ಪ್ರತಿನಿಧಿಸುವವರೂ ಆಗಿದ್ದಾರೆ. ನಾವು ಅವರಿಗೆ ಅಧಿಕೃತ ಆಹ್ವಾನವನ್ನು ಕಳುಹಿಸುತ್ತೇವೆ" ಎಂದು ಇತ್ತೀಚಿಗೆ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಅವರು ಹೇಳಿದ್ದರು. ಈಗ ಪಾಕ್ ಪ್ರಧಾನಿ ಅಧಿಕೃತ ಆಹ್ವಾನ ನೀಡಿದ್ದಾರೆ.
ಕಾರಿಡಾರ್ ಉದ್ಘಾಟನಾ ಸಮಾರಂಭ ಗುರುನಾನಕ್ ದೇವ್ ಅವರ 550 ನೇ ಜನ್ಮ ದಿನಾಚರಣೆಯ ಮೂರು ದಿನಗಳ ಮೊದಲು ನಡೆಯಲಿದೆ. ಆರಂಭದಲ್ಲಿ, ಭಾರತದಿಂದ ಪ್ರತಿದಿನ 5,000 ಯಾತ್ರಾರ್ಥಿಗಳಿಗೆ ಭೇಟಿ ನೀಡಲು ಅವಕಾಶವಿರುತ್ತದೆ ಆದರೆ ನಂತರ ದಿನಕ್ಕೆ 10,000 ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗುವುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಈ ಕಾರಿಡಾರ್ ಕರ್ತಾರ್ಪುರದ ದರ್ಬಾರ್ ಸಾಹಿಬ್ ಅನ್ನು ಪಂಜಾಬ್ನ ಗುರುದಾಸ್ಪುರ ಜಿಲ್ಲೆಯ ಡೇರಾ ಬಾಬಾ ನಾನಕ್ ದೇಗುಲದೊಂದಿಗೆ ಸಂಪರ್ಕಿಸುತ್ತದೆ ಮತ್ತು ಭಾರತೀಯ ಯಾತ್ರಿಕರ ವೀಸಾ ಮುಕ್ತ ಸಂಚಾರಕ್ಕೆ ಅನುಕೂಲವಾಗಲಿದೆ.
Advertisement