ನವದೆಹಲಿ: ಪಾಕಿಸ್ತಾನ ಮೂಲದ ಜಮಾತ್ - ಉದ್- ದಾವಾ ಹಾಗೂ ಲಷ್ಕರ್-ಇ- ತೊಯ್ಬಾ(ಎಲ್ಇಟಿ) ಉಗ್ರ ಸಂಘಟನೆಗಳು ದೆಹಲಿಯಲ್ಲಿರುವ ಭಾರತೀಯ ಸೇನೆ ಮತ್ತು ರೀಸರ್ಚ್ ಅಂಡ್ ಅನಾಲಿಸಿಸ್ ವಿಂಗ್(ರಾ) ಕಚೇರಿಗಳ ಮೇಲೆ ದಾಳಿ ನಡೆಸಲು ಭಾರಿ ಸಂಚು ರೂಪಿಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಉಗ್ರ ಸಂಘಟನೆಗಳು ಭಾರತದಲ್ಲಿ ಭೀಕರ ದಾಳಿ ನಡೆಸಲು ಸಂಚು ರೂಪಿಸಿವೆ. ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಇತ್ತೀಚಿನ ಗುಪ್ತಚರ ಮಾಹಿತಿಯ ಪ್ರಕಾರ, ಅಕ್ಟೋಬರ್ ತಿಂಗಳ ಅಂತ್ಯದಲ್ಲಿ ಭಾರತೀಯ ಸೇನಾ ಮತ್ತು ರಾ ಕಚೇರಿಗಳ ಮೇಲೆ ದಾಳಿ ನಡೆಸಲು ಜಮಾತ್ - ಉದ್- ದಾವಾ ಹಾಗೂ ಲಷ್ಕರ್-ಇ- ತೊಯ್ಬಾ(ಎಲ್ಇಟಿ) ಉಗ್ರ ಸಂಘಟನೆಗಳು ಸಂಚು ರೂಪಿಸಿವೆ.
ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇದರೊಂದಿಗೆ ಪೊಲೀಸ್ ಸಿಬ್ಬಂದಿ ವಾಸಿಸುವ ಸ್ಥಳಗಳು ಹಾಗೂ ಪೊಲೀಸ್ ಮತ್ತು ಅರೆ ಮಿಲಿಟರಿ ಪಡೆಗಳ ಕಚೇರಿಗಳ ಮೇಲೂ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಇದೆ.
ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್)ನ ಏಷಿಯಾ ಪೆಸಿಪಿಕ್ ಗ್ರೂಪ್(ಎಪಿಜಿ)ನಲ್ಲಿ ಪಾಕಿಸ್ತಾನಕ್ಕೆ ಭಾರಿ ಮುಖಭಂಗ ಎದುರಾದ ಬಳಿಕ ಉಗ್ರರು ಈ ಸಂಚು ರೂಪಿಸಿರುವುದಾಗಿ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ.
Advertisement