ಕೋಲ್ಕತಾ: ಶಾರದಾ ಚಿಟ್ ಫಂಡ್ ಹಗರಣದ ಆರೋಪಿ ಕೋಲ್ಕತಾ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಬಂಧಿಸದಂತೆ ನೀಡಿದ್ದ ರಕ್ಷಣೆಯನ್ನು ಕೋಲ್ಕತಾ ಹೈಕೋರ್ಟ್ ಶುಕ್ರವಾರ ಹಿಂಪಡೆದ ಬೆನ್ನಲ್ಲೇ ಹಿರಿಯ ಐಪಿಎಸ್ ಅಧಿಕಾರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಹೀಗಾಗಿ ರಾಜೀವ್ ಕುಮಾರ್ ಗೆ ಬಂಧನದ ಭೀತಿ ಎದುರಾಗಿದೆ.
ಪ್ರಸ್ತುತ ಸಿಐಡಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ರಾಜೀವ್ ಕುಮಾರ್ ಅವರು ನಿವಾಸಕ್ಕೆ ತೆರಳಿದ ಸಿಬಿಐ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.
ತನ್ನ ವಿರುದ್ಧ ಪ್ರಕರಣ ದಾಖಲಿಸಿರುವುದರಿಂದ ಗೌರವ, ಘನತೆಗೆ ಧಕ್ಕೆಯಾಗಿದೆ. ಆದ್ದರಿಂದ ವಿಚಾರಣೆ ವೇಳೆ ತಮ್ಮನ್ನು ಬಂಧಿಸದಂತೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಜೀವ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಧುಮಿತ ಮಿತ್ರಾ ಅವರು, ಕಾನೂನಿಗಿಂತ ಯಾರೊಬ್ಬರೂ ದೊಡ್ಡವರಲ್ಲ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸಿಬಿಐ ಅಧಿಕಾರಿಗಳು ಯಾವಾಗ ಬೇಕಾದರೂ ಅವರನ್ನು ವಿಚಾರಣೆಗೆ ಕರೆಯಬಹುದು ಎಂದು ಅಭಿಪ್ರಾಯಪಟ್ಟಿದೆ.
ಶಾರದಾ ಚಿಟ್ ಫಂಡ್ ಪ್ರಕರಣವನ್ನು 2014ರಲ್ಲಿ ಸುಪ್ರೀಂಕೋರ್ಟ್ ಸಿಬಿಐಗೆ ವಹಿಸುವವರೆಗೂ ರಾಜೀವ್ ಕುಮಾರ್ ಈ ಪ್ರಕರಣದ ಜೊತೆಗೆ ಹಲವು ಚಿಟ್ಫಂಡ್ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದರು. ಹೂಡಿಕೆ ಮಾಡಿದ್ದ ಬಂಡವಾಳಕ್ಕೆ ದುಪ್ಪಟ್ಟು ಹಣ ನೀಡುವುದಾಗಿ ಹೇಳಿ ಶಾರದಾ ಗ್ರೂಪ್ ಸಾವಿರಾರು ಜನರಿಂದ 2500 ಕೋಟಿ ಹಣ ಕಟ್ಟಿಸಿಕೊಂಡು ಮೋಸ ಮಾಡಿದ ಪ್ರಕರಣವೇ ಶಾರದಾ ಚಿಟ್ ಫಂಡ್ ಹಗರಣ.
Advertisement